ನಾಗಪುರ (ಪಿಟಿಐ): ಭಾರತ-ದಕ್ಷಿಣ ಆಫ್ರಿಕಾ ನಡುವೆ ಶನಿವಾರ ಇಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ನೂಕುನುಗ್ಗಲು ಸಂಭವಿಸಿದ್ದು ಅಭಿಮಾನಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಸಿವಿಲ್ ಲೈನ್ಸ್ನಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆಯ ಹಳೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದ 20 ಕಿ.ಮೀ. ದೂರದ ಜಾಮ್ತಾದಲ್ಲಿರುವ ನೂತನ ಕ್ರೀಡಾಂಗಣದಲ್ಲಿ ಮಾರ್ಚ್ 12ರಂದು ಪಂದ್ಯ ನಡೆಯಲಿದೆ.
ಈ ಪಂದ್ಯ ವೀಕ್ಷಿಸಲು ಟಿಕೆಟ್ ಖರೀದಿಸಲು ಅಭಿಮಾನಿಗಳು ಸೋಮವಾರ ರಾತ್ರಿಯಿಂದಲೇ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಟಿಕೆಟ್ ಕೌಂಟರ್ ತೆರೆದಾಗ ಒಮ್ಮೆಲೇ ನೂಗುನುಗ್ಗಲು ಸಂಭವಿಸಿತು. ಅಡ್ಡ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ಮುರಿದು ಕೌಂಟರ್ನತ್ತ ನುಗ್ಗಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ನೂಕುನುಗ್ಗಲನ್ನು ತಡೆಯಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಾಗಾಗಿ ಸಂಘಟಕರು ಟಿಕೆಟ್ ಕೌಂಟರ್ಅನ್ನು ಕೆಲಕಾಲ ಮುಚ್ಚಿದ್ದರು. ಬಳಿಕ ಮತ್ತೆ ತೆರೆದರು.
ಲಾಠಿ ಪ್ರಹಾರದಲ್ಲಿ ಕೆಲ ಅಭಿಮಾನಿಗಳು ಗಾಯಗೊಂಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ಕೂಡ ಬೆಂಗಳೂರಿನಲ್ಲಿ ಲಾಠಿ ಚಾರ್ಜ್ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.