ADVERTISEMENT

ನ್ಯೂಜಲೆಂಡ್ ವಿರುದ್ಧದ ಏಕದಿನ ಸರಣಿ: ದಿನೇಶ್ ಕಾರ್ತಿಕ್, ಶಾರ್ದೂಲ್‌ಗೆ ಸ್ಥಾನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 19:30 IST
Last Updated 14 ಅಕ್ಟೋಬರ್ 2017, 19:30 IST
ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್   

ನವದೆಹಲಿ: ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ವೇಗದ ಬೌಲರ್ ಶಾರ್ದೂಲ್ ಠಾಕೂರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶನಿವಾರ ಪ್ರಕಟಗೊಂಡ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮೂರು ಪಂದ್ಯಗಳ ಸರಣಿಯಲ್ಲಿ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಗೆ ಸ್ಥಾನ ನೀಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ.

ಜುಲೈನಲ್ಲಿ ವೆಸ್ಟ್‌ಇಂಡೀಸ್ ಪ್ರವಾಸ ಕೈಗೊಂಡಿದ್ದ ಭಾರತ ತಂಡದಲ್ಲಿ 32 ವರ್ಷದ ಕಾರ್ತಿಕ್ ಆಡಿದ್ದರು. ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿಯೂ ಇದ್ದರು. ಆಸ್ಟ್ರೇಲಿಯಾ ವಿರುದ್ಧದ ಟ್ವೆಂಟಿ –20 ತಂಡದಲ್ಲಿಯೂ ಸ್ಥಾನ ಪಡೆದಿದ್ದರು. ಆದರೆ ಆಡುವ ಬಳಗದಲ್ಲಿ ಅವರಿಗೆ ಅವಕಾಶ ಸಿಕ್ಕಿಲ್ಲ.

ADVERTISEMENT

ವೇಗಿ ಠಾಕೂರ್‌ ಅವರನ್ನು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ಎದುರಿನ ಸರಣಿಗಳಲ್ಲಿ ಕಡೆಗಣಿಸಲಾಗಿತ್ತು. ಈಗ ಉಮೇಶ್‌ ಯಾದವ್ ಅವರನ್ನು ಕೈಬಿಟ್ಟು ಠಾಕೂರ್‌ಗೆ ಸ್ಥಾನ ನೀಡಲಾಗಿದೆ.

ಕರ್ನಾಟಕದ ಕೆ.ಎಲ್ ರಾಹುಲ್ ಕೂಡ ತಂಡದಲ್ಲಿ ಇಲ್ಲ. ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಆಡಿದ್ದ ಮನೀಷೆ ಪಾಂಡೆ ಅವರನ್ನು ಉಳಿಸಿಕೊಳ್ಳಲಾಗಿದೆ. ಅಶ್ವಿನ್ ಹಾಗೂ ಜಡೇಜ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಬಳಿಕ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಯೊ ಯೊ ಫಿಟ್‌ನೆಸ್‌ ಪರೀಕ್ಷೆಯಲ್ಲಿ ಸಫಲರಾಗಿರುವ ಅವರು ರಣಜಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಭಾರತದ ಸ್ಪಿನ್ ವಿಭಾಗಕ್ಕೆ ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್‌ ಮತ್ತು ಅಕ್ಷರ್ ಪಟೇಲ್ ಬಲ ತುಂಬಲಿದ್ದಾರೆ.

ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್‌, ಅಜಿಂಕ್ಯ ರಹಾನೆ, ಮನೀಷ್‌ ಪಾಂಡೆ, ಕೇದಾರ್ ಜಾಧವ್‌, ದಿನೇಶ್ ಕಾರ್ತಿಕ್‌, ಮಹೇಂದ್ರ ಸಿಂಗ್ ದೋನಿ (ವಿಕೆಟ್ ಕೀಪರ್‌), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್‌, ಕುಲದೀಪ್ ಯಾದವ್‌, ಯಜುವೇಂದ್ರ ಚಾಹಲ್‌, ಜಸ್‌ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.