ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಸೆರಾಯ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಧ್ಯಾಹ್ನದವರೆಗೆ ತಮ್ಮ ಕೆಲವು ಆಪ್ತರ ಜತೆ ಗೋಪ್ಯ ಚರ್ಚೆ ನಡೆಸಿದ್ದಾರೆ.
ಪುತ್ರ ಡಾ.ಯತೀಂದ್ರ, ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ವೆಂಕಟೇಶ್, ಮುಖಂಡರಾದ ಮರೀಗೌಡ, ಚೆನ್ನಾರೆಡ್ಡಿ, ನಂಜಪ್ಪ ಅವರು ಮೊದಲ ಹಂತದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ.
ಚುನಾವಣೆಯಲ್ಲಿ ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಗೆಲುವು ಕುರಿತು ತಂತ್ರಗಾರಿಕೆ ರೂಪಿಸುವುದು ಸಭೆಯ ಉದ್ದೇಶ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಇರುವ ಮೂರು ಕೊಠಡಿಗಳಿಗೆ ಸೇವೆ ಒದಗಿಸುವ ಸಿಬ್ಬಂದಿಯ ಮೊಬೈಲ್ ಫೋನ್ಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದ ಹಲವು ಸ್ಥಳೀಯ ಮುಖಂಡರಿಗೆ ರೆಸಾರ್ಟ್ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಶಾಸಕರಾದ ಭೈರತಿ ಬಸವರಾಜ್ ಹಾಗೂ ಪುಟ್ಟರಂಗಶೆಟ್ಟಿ ಅವರನ್ನೂ ಭದ್ರತಾ ಸಿಬ್ಬಂದಿ ತಡೆದರು. ಕೆಲಕಾಲದ ನಂತರ ಅವರನ್ನು ರೆಸಾರ್ಟ್ ಒಳಗೆ ಬಿಡಲಾಯಿತು. ಆದರೆ, ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ಪ್ರವೇಶ ನಿರಾಕರಿಸಲಾಯಿತು. ನಂತರ, ಅವರು ವಾಪಸ್ ಮೈಸೂರಿಗೆ ತೆರಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.