ಕೊಲಂಬೊ: ರಾಜಕೀಯ ಅಸ್ಥಿರತೆ, ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಟೂರ್ನಿಯನ್ನು ಶ್ರೀಲಂಕಾದಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯ (ಎಸ್ಎಲ್ಸಿ) ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಭಾನುವಾರ ಹೇಳಿದ್ದಾರೆ. ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.
ತೀವ್ರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸೆಣಸುತ್ತಿರುವ ಶ್ರೀಲಂಕಾದಲ್ಲಿ ವಾರದಿಂದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಮಿಲಿಟರಿ ಜೆಟ್ನಲ್ಲಿ ದೇಶದಿಂದ ಪಲಾಯನ ಮಾಡಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿದೆ.
ಈ ಬಾರಿ ಟಿ 20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಪಂದ್ಯಾವಳಿಯ ಸ್ಥಳದಲ್ಲಿನ ಸಂಭವನೀಯ ಬದಲಾವಣೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಎಸ್ಎಲ್ಸಿ ಕಾರ್ಯದರ್ಶಿ ಡಿ ಸಿಲ್ವಾ, ‘ಏಷ್ಯಾ ಕಪ್ ಯುಎಇಯಲ್ಲಿ ನಡೆಯುವ ಸಾಧ್ಯತೆಯಿದೆ’ ಎಂದು ತಿಳಿಸಿದರು.
ಟೂರ್ನಿಯ ವೇಳಾಪಟ್ಟಿ ನಿಗದಿಯಂತೆ, ಆಗಸ್ಟ್ 26 ರಿಂದ ಸೆಪ್ಟೆಂಬರ್ 11 ರವರೆಗೆ ಇರಲಿದೆ ಎಂದು ಅವರು ಹೇಳಿದರು.
ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಗಾನಿಸ್ತಾನ, ಮತ್ತು ಬಾಂಗ್ಲಾದೇಶ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.