ADVERTISEMENT

ಅಂಧರ ಟಿ20 ವಿಶ್ವಕಪ್‌ ಫೈನಲ್: ಹ್ಯಾಟ್ರಿಕ್‌ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2022, 4:32 IST
Last Updated 17 ಡಿಸೆಂಬರ್ 2022, 4:32 IST
ಪ್ರಕಾಶ್ ಜಯರಾಮಯ್ಯ
ಪ್ರಕಾಶ್ ಜಯರಾಮಯ್ಯ   

ಬೆಂಗಳೂರು: ಹ್ಯಾಟ್ರಿಕ್‌ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡದವರು ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಶನಿವಾರ ಬಾಂಗ್ಲಾದೇಶದ ಸವಾಲು ಎದುರಿಸಲಿದ್ದಾರೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ಈ ಹಿಂದೆ ನಡೆದ ಎರಡೂ ಆವೃತ್ತಿಗಳಲ್ಲಿ ಭಾರತ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿತ್ತು. 2012ರ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು 29 ರನ್‌ಗಳಿಂದ ಮಣಿಸಿತ್ತು. 2017ರಲ್ಲಿ ನಡೆದ ಎರಡನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಸೆಣಸಾಟದಲ್ಲಿ ಪಾಕಿಸ್ತಾನದ ವಿರುದ್ಧವೇ ಒಂಬತ್ತು ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಇವೆರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು.

ADVERTISEMENT

ಈ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ ತಂಡವು 207 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿತ್ತು. ನಾಲ್ಕರ ಘಟ್ಟದ ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾ ತಂಡವು 64 ರನ್‌ಗಳಿಂದ ಶ್ರೀಲಂಕಾ ತಂಡದ ಸವಾಲು ಮೀರಿತ್ತು.

ಭಾರತ ತಂಡದ ನಾಯಕ ಅಜಯ್‌ಕುಮಾರ್ ರೆಡ್ಡಿ, ಕನ್ನಡಿಗರಾದ ಸುನಿಲ್ ರಮೇಶ್, ಪ್ರಕಾಶ್ ಜಯರಾಮಯ್ಯ ಉತ್ತಮ ಲಯದಲ್ಲಿದ್ದು ಫೈನಲ್‌ನಲ್ಲಿ ಮಿಂಚುವ ನಿರೀಕ್ಷೆಯಿದೆ.ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿರುವ ಬಾಂಗ್ಲಾ ಕೂಡ ಗೆಲುವಿನ ನಿರೀಕ್ಷೆಯಲ್ಲಿದೆ. ಸಲ್ಮಾನ್‌ ಮತ್ತು ಮೊಹಮ್ಮದ್‌ ಆಶಿಕುರ್ ರೆಹಮಾನ್‌ ಆ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.

ಪಂದ್ಯ ಆರಂಭ: ಬೆಳಿಗ್ಗೆ 10.30
ನೇರ ಪ್ರಸಾರ: ಡಿಡಿ ಸ್ಪೋರ್ಟ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.