ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಜಯಿಸಿದ ಭಾರತ ಕ್ರಿಕೆಟ್ ತಂಡ ಪ್ರಶಸ್ತಿಯೊಂದಿಗೆ ಸಂಭ್ರಮಿಸಿತು.
–ಪಿಟಿಐ ಚಿತ್ರ
ದುಬೈ: ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜದ ಸಂಭ್ರಮ ಗಗನಮುಖಿಯಾಯಿತು. ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡಕ್ಕೆ 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಒಲಿಯಿತು.
ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿದ ಭಾರತ ‘ಚಾಂಪಿಯನ್’ ಆಯಿತು. ಇದರೊಂದಿಗೆ ಈ ಟೂರ್ನಿಯ ಇತಿಹಾಸದಲ್ಲಿ ಭಾರತವು 3ನೇ ಬಾರಿ ಪ್ರಶಸ್ತಿ ಗೆದ್ದಿತು. 2002ರಲ್ಲಿ ಶ್ರೀಲಂಕಾದೊಂದಿಗೆ ಜಂಟಿಯಾಗಿ ಪ್ರಶಸ್ತಿ ಹಂಚಿಕೊಂಡಿತ್ತು. 2013ರಲ್ಲಿ ಮಹೇಂದ್ರಸಿಂಗ್ ಧೋನಿ ಬಳಗವು ಪ್ರಶಸ್ತಿ ಗೆದ್ದಿತ್ತು. 2017ರಲ್ಲಿಯೂ ಫೈನಲ್ ತಲುಪಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ಪಾಕಿಸ್ತಾನದ ಎದುರು ಪರಾಭವಗೊಂಡಿತ್ತು. ಇದೀಗ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಟೂರ್ನಿಯಲ್ಲಿ ಕಿರೀಟ ಧರಿಸಿತು.
ಅಲ್ಲದೇ 25 ವರ್ಷಗಳ ಹಿಂದೆ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು ಅನುಭವಿಸಿದ್ದ ಸೋಲಿಗೂ ಸೇಡು ತೀರಿಸಿಕೊಂಡಿತು. 252 ರನ್ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 254 ರನ್ ಗಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.