ಹಿಸ್ಸಾರ್, ಹರಿಯಾಣ: ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ಬಗ್ಗೆ ಜಾತಿ ನಿಂದನೆಯ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರಿಯಾಣ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಜತ್ ಕಲ್ಸಾನ್ ಎಂಬ ವಕೀಲರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಳೆದ ವರ್ಷ ರೋಹಿತ್ ಶರ್ಮಾ ಜೊತೆ ನಡೆಸಿದ ಇನ್ಸ್ಟಾಗ್ರಾಂ ಸಂವಾದದಲ್ಲಿ ಸಾಮಾಜಿಕ ತಾಣಗಳಲ್ಲಿ ಚಾಹಲ್ ಹಾಕುವ ಪೋಸ್ಟ್ಗಳ ಬಗ್ಗೆ ಮಾತನಾಡುತ್ತ ಯುವರಾಜ್ವಿವಾದಾಸ್ಪದ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೋರಿದ್ದರು. ಯಾರದೇ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಮಾತನಾಡಲಿಲ್ಲ. ಆದರೂ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದ್ದರು.
‘ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡಸಂಹಿತೆಯ ವಿವಿಧ ಕಲಂಗಳನ್ನು ಉಲ್ಲೇಖಿಸಿ ಹನ್ಸಿ ಠಾಣೆಯಲ್ಲಿ ಭಾನುವಾರ ರಜತ್ ದೂರು ನೀಡಿದ್ದಾರೆ. ಅದರ ಪ್ರಕಾರ ಎಫ್ಐಆರ್ದಾಖಲಿಸಲಾಗಿದೆ’ ಎಂದು ಹನ್ಸಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಾಮಾಜಿಕ ತಾಣಗಳಲ್ಲಿ ಲಕ್ಷಾಂತರ ಮಂದಿ ಸಂವಾದದ ವಿಡಿಯೊ ವೀಕ್ಷಿಸಿದ್ದು ಯುವರಾಜ್ ಸಿಂಗ್ ಅವರ ಹೇಳಿಕೆಯಿಂದ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿರುವ ರಜತ್ ಅವರು ಹರಿಯಾಣ ಗೃಹಸಚಿವ ಅನಿಲ್ ವಿಜ್ ಅವರಿಗೂ ದೂರು ನೀಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ವಿಜ್ ಸೂಚಿಸಿದ್ದಾರೆ.
ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆಗಾಗಿ ಹಿಸ್ಸಾರ್ನಲ್ಲಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯಕ್ಕೂ ರಜತ್ ದೂರು ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ನೀಡುವಂತೆ ನ್ಯಾಯಾಲಯ ಹನ್ಸಿ ಪೊಲೀಸರಿಗೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.