ಮುಂಬೈ: ಗಾಯದಿಂದ ಬಳಲುತ್ತಿರುವ ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಅಫ್ಗಾನಿಸ್ತಾನ ವಿರುದ್ಧದ ಟ್ವೆಂಟಿ-20 ಸರಣಿಗೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಆದರೆ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳೆಗೆ ಆಡಲು ದೈಹಿಕವಾಗಿ ಸಮರ್ಥರಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ.
ಇತ್ತೀಚೆಗಷ್ಟೇ ರೋಹಿತ್ ಶರ್ಮಾ ಅವರ ಬದಲಿಗೆ ಹಾರ್ದಿಕ್ ಅವರನ್ನು ನಾಯಕರನ್ನಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನೇಮಕಗೊಳಿಸಿತ್ತು.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಗಾಯಗೊಂಡಿದ್ದರು. ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ತಮ್ಮದೇ ಬೌಲಿಂಗ್ನಲ್ಲಿ ಚೆಂಡು ಹಿಡಿಯಲು ಯತ್ನಿಸಿದಾಗ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಅವರು ನಾಲ್ಕು ಪಂದ್ಯಗಳಲ್ಲಿ ಐದು ವಿಕೆಟ್ ಗಳಿಸಿದ್ದರು.
ಬಳಿಕ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದರು. ಪ್ರಸ್ತುತ ಸಾಗುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹೊರಗುಳಿದಿದ್ದಾರೆ.
ಅಫ್ಗಾನಿಸ್ತಾನ ವಿರುದ್ಧದ ಟ್ವೆಂಟಿ-20 ಸರಣಿಯು ಮುಂದಿನ ವರ್ಷಾರಂಭದಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.