
ಶುಭಮನ್ ಗಿಲ್
(ಪಿಟಿಐ ಚಿತ್ರ)
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಕುತ್ತಿಗೆ ನೋವಿನಿಂದ ಪಂದ್ಯದಿಂದ ಹೊರಗುಳಿದಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಸಿಸಿಐ ಬುಧವಾರ ಮಾಹಿತಿ ನೀಡಿದೆ.
ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ತಂಡದ ನಾಯಕ ಶುಭಮನ್ ಗಿಲ್ ಬ್ಯಾಟಿಂಗ್ ಮಾಡಲು ಆಗಮಿಸಿದಾಗ ಕುತ್ತಿಗೆ ನೋವಿನ ಸಮಸ್ಯೆಯಿಂದ ಮೈದಾನದಿಂದ ಹೊರನಡೆದಿದ್ದರು. ಈ ಪಂದ್ಯವನ್ನು ಭಾರತ 30 ರನ್ಗಳಿಂದ ಸೋಲು ಅನುಭವಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ.
‘ಶುಭಮನ್ ಗಿಲ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಮತ್ತು ಇಂದು (ಬುಧವಾರ) ತಂಡದೊಂದಿಗೆ ಅವರು ಗುವಾಹಟಿಗೆ ಪ್ರಯಾಣಿಸಲಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.
‘ಶುಭಮನ್ ಗಿಲ್ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದು, ಅದು ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಅವರು 2ನೇ ಟೆಸ್ಟ್ನಲ್ಲಿ ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದಿದ್ದಾರೆ.
ಗಿಲ್ ಎರಡನೇ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಕಡಿಮೆ ಇರುವುದರಿಂದ ಯುವ ಆಲ್ರೌಂಡರ್ ನಿತೀಶ್ ರೆಡ್ಡಿ ಅವರನ್ನು ಕೋಲ್ಕತ್ತಗೆ ಕರೆಸಿಕೊಳ್ಳಲಾಗಿದೆ. ಒಂದುವೇಳೆ ಗಿಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರ ಜಾಗದಲ್ಲಿ ರೆಡ್ಡಿ ಆಡುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.