ಟೀಮ್ ಇಂಡಿಯಾ ಆಟಗಾರರ ಸಂಭ್ರಮ
(ಚಿತ್ರ ಕೃಪೆ: ಬಿಸಿಸಿಐ)
ದುಬೈ: ಟೀಮ್ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಒಂದೇ ಓವರ್ನಲ್ಲಿ ಮೂರು ವಿಕೆಟ್ಗಳ ಸಾಧನೆ ಮಾಡಿದ್ದಾರೆ.
ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಯುಎಇ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕುಲದೀಪ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಟಾಸ್ ಗೆದ್ದ ಟೀಮ್ ಇಂಡಿಯಾದ ಕಪ್ತಾನ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಇದರಂತೆ ಭಾರತೀಯ ಬೌಲರ್ಗಳು ಎದುರಾಳಿ ಬ್ಯಾಟರ್ಗಳನ್ನು ಕಟ್ಟಿ ಹಾಕಿದರು.
ಇನಿಂಗ್ಸ್ನ 8ನೇ ಓವರ್ನಲ್ಲಿ ಕುಲದೀಪ್ ಮೂರು ವಿಕೆಟ್ ಕಿತ್ತು ಮಿಂಚಿದರು.
ಮೊದಲ ಎಸೆತದಲ್ಲಿ ರಾಹುಲ್ ಚೋಪ್ರಾ ಅವರನ್ನು ಹೊರದಬ್ಬಿದ ಕುಲದೀಪ್ ನಾಲ್ಕನೇ ಎಸೆತದಲ್ಲಿ ಮುಹಮ್ಮದ್ ವಾಸೀಂ ಅವರನ್ನು ಎಲ್ಬಿಡಬ್ಲ್ಯು ಬಲೆಗೆ ಬೀಳಿಸಿದರು.
ಬಳಿಕ ಓವರ್ನ ಕೊನೆಯ ಎಸೆತದಲ್ಲಿ ಹರ್ಷೀತ್ ಕೌಶಿಕ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
ಈ ಮೊದಲು ಆಡುವ ಹನ್ನೊಂದರ ಬಳಗದಲ್ಲಿ ಕುಲದೀಪ್ ಕಾಣಿಸಿಕೊಳ್ಳುವರೇ ಎಂಬುದರ ಬಗ್ಗೆ ಅನುಮಾನ ಮೂಡಿತ್ತು. ಆದರೆ ಆಲ್ರೌಂಡರ್ ಅಕ್ಷರ್ ಪಟೇಲ್ ಜೊತೆಗೆ ಸ್ಪಿನ್ ದ್ವಯರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧರಿಸಿತ್ತು. ಇದೀಗ ನಾಯಕ ಹಾಗೂ ಕೋಚ್ ಅವರ ನಿರ್ಧಾರ ಸರಿಯೆಂದು ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಸಾಬೀತುಪಡಿಸಿದ್ದಾರೆ.
ಗಿಲ್ ಪುನರಾಗಮನ, ಸಂಜುಗೆ ಅವಕಾಶ...
ಮತ್ತೊಂದೆಡೆ ಉಪನಾಯಕ ಶುಭಮನ್ ಗಿಲ್ ಟಿ20 ತಂಡಕ್ಕೆ ಪುನರಾಗಮನ ಮಾಡಿಕೊಂಡಿದ್ದಾರೆ. ಅವರು ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.
ಟಿ20 ಆರಂಭಿಕನಾಗಿ ಗುರುತಿಸಿಕೊಂಡಿದ್ದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸಹ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಇದರಿಂದಾಗಿ ಆರ್ಸಿಬಿಯ ತಾರೆ ಜಿತೇಶ್ ಶರ್ಮಾ ತಮ್ಮ ಅವಕಾಶಕ್ಕಾಗಿ ಮತ್ತಷ್ಟು ಕಾಯಬೇಕಿದೆ.
ಇನ್ನು ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ ಜೊತೆಗೆ ತಿಲಕ್ ವರ್ಮಾ ಹಾಗೂ ತಂಡದಲ್ಲಿದ್ದಾರೆ.
ಜಸ್ಪ್ರೀತ್ ಬೂಮ್ರಾ ಆಡುವ ಬಳಗದಲ್ಲಿರುವ ಏಕೈಕ ವೇಗಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.