ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಅವರನ್ನು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಶ್ಲಾಘಿಸಿದ್ದಾರೆ.
ಮೋಟೆರಾದ ನರೇಂದ್ರ ಮೋದಿ ಕ್ರಿಕೆಟ್ ಅಂಗಳದಲ್ಲಿ ನಡೆದಪಂದ್ಯದಲ್ಲಿ ಭಾರತ ತಂಡ ವಿಂಡೀಸ್ ವಿರುದ್ಧ 44 ರನ್ ಅಂತರದ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು 2–0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.ಪಂದ್ಯದಲ್ಲಿ 9 ಓವರ್ ಬೌಲಿಂಗ್ ಮಾಡಿದ ಕೃಷ್ಣ, ಕೇವಲ 12 ರನ್ ಬಿಟ್ಟುಕೊಟ್ಟು 4 ವಿಕೆಟ್ ಉರುಳಿಸಿ, ಪಂದ್ಯಶ್ರೇಷ್ಠ ಎನಿಸಿಕೊಂಡರು.
ಪ್ರಸಿದ್ಧ ಪ್ರದರ್ಶನದ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಪಠಾಣ್, 'ಪ್ರಸಿದ್ಧ ಕೃಷ್ಣ ಇಂದು ಅಮೋಘ ಪ್ರದರ್ಶನ ನೀಡಿದ್ದಾರೆ. ನೀಳಕಾಯದ ವೇಗದ ಬೌಲರ್ ಪ್ರಗತಿಯತ್ತ ಸಾಗುತ್ತಿರುವುದನ್ನು ನೋಡಲು ಖುಷಿಯಾಗುತ್ತದೆ. ವೆಲ್ ಡನ್ ಟೀಂ ಇಂಡಿಯಾ' ಎಂದು ಅಭಿನಂದಿಸಿದ್ದಾರೆ.
ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 239 ರನ್ ಗಳಿಸಿತ್ತು. ನಾಯಕ ರೋಹಿತ್ ಶರ್ಮಾ (5) ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ (18) ವೈಫಲ್ಯ ಅನುಭವಿಸಿದರೂ, ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ (64) ಮತ್ತು ಉಪನಾಯಕ ಕೆ.ಎಲ್.ರಾಹುಲ್ (49) ಉಪಯುಕ್ತ ಕೊಡುಗೆ ನೀಡಿದರು.
ಸಾಧಾರಣ ಮೊತ್ತ ಬೆನ್ನತ್ತಿದ ವೆಸ್ಟ್ ಇಂಡೀಸ್ಇನ್ನೂ 4 ಓವರ್ ಇರುವಾಗಲೇ 193 ರನ್ ಗಳಿಗೆ ಸರ್ವಪತನ ಕಂಡಿತು.2 ವಿಕೆಟ್ ಪಡೆದ ಶಾರ್ದೂಲ್ ಠಾಕೂರ್, ತಲಾ ಒಂದೊಂದು ವಿಕೆಟ್ ಹಂಚಿಕೊಂಡ ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್ ಮತ್ತು ದೀಪಕ್ ಹೂಡಾ ಅವರು ಪ್ರಸಿದ್ಧ ಕೃಷ್ಣಗೆ ಉತ್ತಮ ಬೆಂಬಲ ನೀಡಿದರು.
ಇದೇ ಮೈದಾನದಲ್ಲಿ ಫೆ.6 ರಂದು ನಡೆದ ಮೊದಲ ಪಂದ್ಯವನ್ನು ರೋಹಿತ್ ಪಡೆ ಆರು ವಿಕೆಟ್ ಅಂತರದಿಂದ ಗೆದ್ದುಕೊಂಡಿತ್ತು. ಮೂರನೇ ಹಾಗೂ ಅಂತಿಮ ಪಂದ್ಯವೂ ಇದೇ ಕ್ರೀಡಾಂಗಣದಲ್ಲಿ ಫೆ.11 ರಂದು ನಡೆಯಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.