ಮುಂಬೈ: ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ತಂಡವು ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ.
ಬುಧವಾರ ತಂಡವನ್ನು ಪ್ರಕಟಿಸಲಾಗಿದ್ದು, ಕೊರೊನಾ ಸೋಂಕು ತಗುಲಿರುವ ವಾಷಿಂಗ್ಟನ್ ಸುಂದರ್ ಅವರನ್ನು ಕೈಬಿಡಲಾಗಿದೆ. ಜಯಂತ್ ಯಾದವ್ ಮತ್ತು ಮಧ್ಯಮವೇಗಿ ನವದೀಪ್ ಸೈನಿ ಅವರಿಗೆ ಅವಕಾಶ ನೀಡಲಾಗಿದೆ.
ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದ ನಂತರ ಇದೇ ಮೊದಲ ಸಲ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಗಾಯಗೊಂಡಿರುವ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ನಾಯಕತ್ವ ವಹಿಸಿದ್ದಾರೆ. ಜಸ್ಪ್ರೀತ್ ಬೂಮ್ರಾ ಉಪನಾಯಕರಾಗಿದ್ದಾರೆ. ಕರ್ನಾಟಕದ ಪ್ರಸಿದ್ಧ ಕೃಷ್ಣ ತಂಡದಲ್ಲಿದ್ಧಾರೆ. ಐಪಿಎಲ್ನಲ್ಲಿ ಮಿಂಚಿರುವ ಬ್ಯಾಟರ್ ಋತುರಾಜ್ ಗಾಯಕವಾಡ್ ಮತ್ತು ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರೂ ತಂಡದಲ್ಲಿದ್ದಾರೆ.
‘ವಾಷಿಂಗ್ಟನ್ ಸುಂದರ್ ಅವರು ಕೇಪ್ಟೌನ್ಗೆ ತೆರಳಬೇಕಿತ್ತು. ಆದರೆ ಅವರಿಗೆ ಕೋವಿಡ್ ತಗುಲಿರುವುದು ಖಚಿತವಾಗಿದೆ. ಆದ್ದರಿಂದ ಅವರನ್ನು ಕೈಬಿಡಲಾಗಿದೆ. ಅವರ ಬದಲಿಗೆ ಜಯಂತ್ ಯಾದವ್ ಆಯ್ಕೆಯಾಗಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚೇತನ್ ಶರ್ಮಾ ಮುಖ್ಯಸ್ಥರಾಗಿರುವ ಐವರು ಸದಸ್ಯರ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ಇದೇ 19 ರಿಂದ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ.
ತಂಡ: ಕೆ.ಎಲ್. ರಾಹುಲ್ (ನಾಯಕ), ಜಸ್ಪ್ರೀತ್ ಬೂಮ್ರಾ (ಉಪನಾಯಕ), ಶಿಖರ್ ಧವನ್, ಋತುರಾಜ್ ಗಾಯಕವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್, ಇಶಾನ್ ಕಿಶನ್ (ವಿಕೆಟ್ಕೀಪರ್), ಯಜುವೇಂದ್ರ ಚಾಹಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.