ADVERTISEMENT

ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣಗೆ ಕೋವಿಡ್ ಸೋಂಕು ದೃಢ

ಏಜೆನ್ಸೀಸ್
Published 8 ಮೇ 2021, 9:25 IST
Last Updated 8 ಮೇ 2021, 9:25 IST
ಪ್ರಸಿದ್ಧ ಕೃಷ್ಣ
ಪ್ರಸಿದ್ಧ ಕೃಷ್ಣ   

ನವದೆಹಲಿ: ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದ ಭಾರತದ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರಿಗೆ ಕೋವಿಡ್-19 ಸೋಂಕು ದೃಢಗೊಂಡಿದೆ.

ಈ ಮೊದಲು ಕೆಕೆಆರ್ ತಂಡದಲ್ಲಿದ್ದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ ಹಾಗೂ ಟಿಮ್ ಸೀಫರ್ಟ್ ಅವರಿಗೂ ಕೋವಿಡ್ ಸೋಂಕು ತಗುಲಿತ್ತು.

ಬಯೋಬಬಲ್ ಅನ್ನು ಕೋವಿಡ್ ಬೇಧಿಸಿದ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿತ್ತು.

ADVERTISEMENT

ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗಾಗಿ ಆರಿಸಿದ ಭಾರತ ತಂಡದಲ್ಲಿ ಮೀಸಲು ಆಟಗಾರರಲ್ಲಿ ಕರ್ನಾಟಕದ ಪ್ರಸಿದ್ಧ ಕೃಷ್ಣ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲಿ ಆಡಿದ್ದ ಪ್ರಸಿದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

ವರುಣ್ ಹಾಗೂ ಸಂದೀಪ್‌ ಅವರಿಗೆ ಕೋವಿಡ್ ಸೋಂಕು ದೃಢಗೊಂಡ ಕಾರಣ ಅಹಮದಾಬಾದ್‌ನಲ್ಲಿ ನಡೆಯಬೇಕಾಗಿದ್ದ ಕೆಕೆಆರ್ ಹಾಗೂ ಆರ್‌ಸಿಬಿ ನಡುವಣ ಪಂದ್ಯವನ್ನು ಮುಂದೂಡಲಾಗಿತ್ತು.

ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಎಲ್. ಬಾಲಾಜಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಹ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಮಿಶ್ ಮಿಶ್ರಾ ಅವರಿಗೂ ಕೊರೊನಾವೈರಸ್ ತಗುಲಿತ್ತು. ಆಟಗಾರರಲ್ಲೂ ಸೋಂಕು ಕಾಣಿಸಿಕೊಂಡ ಪರಿಣಾಮತುರ್ತು ಸಭೆ ನಡೆಸಿದ್ದ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿಯು ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲು ನಿರ್ಧರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.