ನವದೆಹಲಿ: ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಅಪೆಂಡಿಸೈಟಸ್ನಿಂದ (ಕರುಳು ಸಂಬಂಧಿ ಕಾಯಿಲೆ) ಬಳಲುತ್ತಿದ್ದಾರೆ ಎಂಬುದು ತಿಳಿದು ಬಂದಿದ್ದು, ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇದರಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಉಳಿದಿರುವ ಪಂದ್ಯಗಳಿಗೆ ರಾಹುಲ್ ಅಲಭ್ಯರಾಗುವುದು ಖಚಿತವೆನಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕೂ ಮುನ್ನ ಈ ಬಗ್ಗೆ ಪಂಜಾಬ್ ಕಿಂಗ್ಸ್ ಪ್ರಕಟಣೆ ಹೊರಡಿಸಿದೆ.
ಕಳೆದ ರಾತ್ರಿ ಕೆ.ಎಲ್. ರಾಹುಲ್ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಔಷಧಿಗಳಿಗೂ ಸ್ಪಂದಿಸುತ್ತಿರಲಿಲ್ಲ. ಬಳಿಕ ಹೆಚ್ಚಿನ ಪರೀಕ್ಷೆಗೆ ಪ್ರತ್ಯೇಕ ಕೋಣೆಗೆ ಕರೆದೊಯ್ಯಲಾಯಿತು. ಬಳಿಕ ತೀವ್ರ ಅಪೆಂಡಿಸೈಟಸ್ನಿಂದ ಬಳಲುತ್ತಿದ್ದಾರೆ ಎಂಬುದು ತಿಳಿದು ಬಂದಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಐಪಿಎಲ್ 14ನೇ ಆವೃತ್ತಿಯಲ್ಲಿ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ 66.20ರ ಸರಾಸರಿಯಲ್ಲಿ 331 ರನ್ ಗಳಿಸಿರುವ ರಾಹುಲ್ ಆರೆಂಜ್ ಕ್ಯಾಪ್ಗೆ ಒಡೆಯರಾಗಿದ್ದರು.
ರಾಹುಲ್ ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಪಂಜಾಬ್ ಕಿಂಗ್ಸ್ ಇನ್ನಷ್ಟೇ ಘೋಷಿಸಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.