ಶಾರ್ಜಾ: ಶಾರ್ಜಾದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ನಡುವಣ ಒಡನಾಟವು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಐಪಿಎಲ್ನಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ನಡೆಯಿತು. ಅಂತಿಮವಾಗಿ ಚೆನ್ನೈ ಜಯಭೇರಿ ಮೊಳಗಿಸಿತು.
ಮೈದಾನದಲ್ಲಿ ಎದುರಾಳಿಯಾದರೂ ಮೈದಾನದ ಹೊರಗಡೆ ಕೊಹ್ಲಿ ಹಾಗೂ ಧೋನಿ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಂಡಿದ್ದಾರೆ.
ಮರಳು ಗಾಳಿಯಿಂದಾಗಿ ಟಾಸ್ ಅರ್ಧ ತಾಸಿನಷ್ಟು ವಿಳಂಬವಾಗಿತ್ತು. ಈ ಸಂದರ್ಭದಲ್ಲಿ ಇಬ್ಬರು ಕ್ರಿಕೆಟ್ ಹಾಗೂ ಕ್ರಿಕೆಟ್ ಹೊರತಾದವಿಷಯಗಳ ಬಗ್ಗೆ ಮಾತುಕತೆ ನಡೆಸುತ್ತಿರುವುದು ಕ್ಯಾಮೆರಾ ಕಣ್ಣುಗಳಲ್ಲಿ ದರ್ಶನವಾಗಿತ್ತು.
ಪರಸ್ಪರ ನಗೆ ಚಟಾಕಿ ಹಾರಿಸಿದ್ದರಲ್ಲದೆ ಒಬ್ಬರನ್ನೊಬ್ಬರು ತಬ್ಬಿಕೊಂಡು ಸೋದರತ್ವವನ್ನು ಮೆರೆದರು.
ವಿರಾಟ್ ಕೊಹ್ಲಿ ಯಶಸ್ಸಿನಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಹತ್ವದ ಪಾತ್ರ ವಹಿಸಿದ್ದಾರೆ. ಕೊಹ್ಲಿ ಕೂಡಾ ಮಹಿ ವ್ಯಕ್ತಿತ್ವದ ಬಗ್ಗೆ ಅಪಾರ ಗೌರವವನ್ನು ಕಾಪಾಡಿಕೊಂಡಿದ್ದಾರೆ.
ಮುಂಬರುವ ಟ್ವೆಂಟಿ-20 ವಿಶ್ವಕಪ್ನಲ್ಲಿ ಧೋನಿ ಮಾರ್ಗದರ್ಶಕರಾಗಿ ನೇಮಕಗೊಂಡಿರುವುದು ಕೊಹ್ಲಿಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.