ನವದೆಹಲಿ: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಚೆನ್ನೈನಿಂದ ಹೈದರಾಬಾದ್ಗೆ ಸ್ಥಳಾಂತರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ. ಎಂ.ಎ.ಚಿದಂಬರಂ ಕ್ರೀಡಾಂಗಣದ ಮೂರು ಕಡೆಯ ಪ್ರೇಕ್ಷಕರ ಸ್ಟ್ಯಾಂಡ್ಗಳಿಗೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೇ ಎಂಟರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯ ಮತ್ತು ಮೇ 10ರಂದು ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯಗಳನ್ನು ವಿಶಾಖಪಟ್ಟಣಂಗೆ ಸ್ಥಳಾಂತರಿಸಲಾಗಿದೆ. ಪಾಯಿಂಟ್ ಪಟ್ಟಿಯ ಅಗ್ರ ಎರಡರಲ್ಲಿ ಸ್ಥಾನ ಗಳಿಸಿದರೆ ಮೊದಲ ಕ್ವಾಲಿಫೈಯರ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಲಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.
ಸ್ಥಳೀಯಾಡಳಿತ ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದಿಂದಾಗಿ ಚಿದಂಬರಂ ಕ್ರೀಡಾಂಗಣದ ಐ, ಜೆ ಮತ್ತು ಕೆ ಸ್ಟ್ಯಾಂಡ್ಗಳನ್ನು ಕೆಲವು ವರ್ಷಗಳಿಂದ ಮುಚ್ಚಲಾಗಿದೆ.
‘ಫೈನಲ್ ಪಂದ್ಯದ ಸಂದರ್ಭದಲ್ಲಿ ಇವುಗಳನ್ನು ಪ್ರೇಕ್ಷಕರಿಗೆ ಮುಕ್ತಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ ಭರವಸೆ ನೀಡಿತ್ತು. ಆದರೆ ಸಂಸ್ಥೆ ಇನ್ನೂ ಭರವಸೆ ಈಡೇರಿಸಲಿಲ್ಲ’ ಎಂದು ಬಿಸಿಸಿಐನ ಆಡಳಿತಾಧಿಕಾರಿಗಳ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಸೋಮವಾರ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.