ಜಸ್ಪ್ರೀತ್ ಬೂಮ್ರಾ
(ಚಿತ್ರ ಕೃಪೆ: X/@BCCI)
ಎಜ್ಬಾಸ್ಟನ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಜಸ್ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ.
ಆದರೆ ಲಾರ್ಡ್ಸ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ವೇಗಿ ಆಡಲಿದ್ದಾರೆ ಎಂದು ನಾಯಕ ಶುಭಮನ್ ಗಿಲ್ ಖಚಿತಪಡಿಸಿದ್ದಾರೆ.
ಎಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದ ಆರಂಭಕ್ಕೂ ಮುನ್ನ ನಡೆದ ಟಾಸ್ ವೇಳೆಯಲ್ಲಿ ಗಿಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬೂಮ್ರಾ ಅವರ ಕೆಲಸದೊತ್ತಡವನ್ನು ನಿಭಾಯಿಸುವ ಭಾಗವಾಗಿ ವಿಶ್ರಾಂತಿ ನೀಡಲಾಗಿದೆ. ಲಾರ್ಡ್ಸ್ ಪಿಚ್ನಲ್ಲಿ ವೇಗಿಗಳಿಗೆ ಹೆಚ್ಚಿನ ನೆರವು ಸಿಗುವ ಸಾಧ್ಯತೆಯಿರುವುದರಿಂದ ಆ ಮೈದಾನದಲ್ಲಿ ಆಡಲಿದ್ದಾರೆ ಎಂದು ಹೇಳಿದ್ದಾರೆ.
ಲೀಡ್ಸ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ಐದು ವಿಕೆಟ್ ಗಳಿಸಿದ್ದರು.
ಕುಲದೀಪ್ಗಿಲ್ಲ ಅವಕಾಶ...
ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್ ಹಾಗೂ ಆಕಾಶ್ ದೀಪ್ ಅವರಿಗೆ ಅವಕಾಶ ನೀಡಲಾಗಿದೆ. ಸಾಯಿ ಸುದರ್ಶನ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಕೈಬಿಡಲಾಗಿದೆ.
ಈ ನಡುವೆ ಕುಲದೀಪ್ ಯಾದವ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಗಿಲ್, ಕೆಳ ಕ್ರಮಾಂಕದವರೆಗೂ ಬ್ಯಾಟಿಂಗ್ ವಿಭಾಗವನ್ನು ಬಲಾಢ್ಯಗೊಳಿಸುವ ನಿಟ್ಟಿನಲ್ಲಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.