ಬೆಂಗಳೂರು: ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಯಾವುದೇ ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಮೇ 31ರ ಕಾದು ನೋಡಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ತಿಳಿಸಿದೆ.
ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ, ‘ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ರಿಕೆಟಿಗರು, ಕೋಚ್ಗಳು, ನೆರವು ಸಿಬ್ಬಂದಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಎಲ್ಲರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತೇವೆ. ಪೂರ್ಣಪ್ರಮಾಣದಲ್ಲಿ ಕ್ರಿಕೆಟ್ ಚಟುವಟಿಕೆಗಳನ್ನು ಆರಂಭಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಗೊಳಿಸುತ್ತೇವೆ. ಉತ್ತಮವಾದ ಯೋಜನೆಯೊಂದಿಗೆ ಕಾರ್ಯಾರಂಭ ಮಾಡಲಾಗುವುದು’ ಎಂದಿದ್ಧಾರೆ.
‘ಇದೇ 31ರವರೆಗೆ ಆಟಗಾರರು, ಕೋಚ್ ಮತ್ತು ಸಿಬ್ಬಂದಿಗಳು ಈ ಕುರಿತು ಚರ್ಚಿಸುವಂತಿಲ್ಲ. ಆನ್ಲೈನ್ ಮೂಲಕ ಕ್ರಿಕೆಟ್ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡುವಂತೆ ವ್ಯವಸ್ಥಾಪಕರು, ಕೋಚ್ಗಳಿಗೆ ಮನವಿ ಮಾಡಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಈ ಕಾರ್ಯ ಮಾಡುವಂತೆ ಹೇಳಲಾಗಿದೆ’ ಎಂದು ತಿಳಿಸಿದ್ದಾರೆ.
‘ಕೇಂದ್ರ ಹಾಗೂ ರಾಜ್ಯ ಸರ್ಕಾರ, ಐಸಿಸಿ, ಬಿಸಿಸಿಐ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲು ಬದ್ಧರಾಗಿದ್ದೇವೆ. ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಿಕೆಟ್ ಚಟುವಟಿಕೆಗಳ ರೂಪುರೇಷೆ ಸಿದ್ಧಪಡಿಸಲಾಗುವುದು. ಅಲ್ಲದೇ 31ರವರೆಗೆ ನಮ್ಮ ಕ್ರೀಡಾ ಕೇಂದ್ರವನ್ನು ಬಂದ್ ಮಾಡಲಾಗಿದೆ’ ಎಂದು ವಿನಯ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.