ADVERTISEMENT

ಏಷ್ಯಾಕಪ್ ಆಯೋಜಿಸದಿದ್ದರೆ, ವಿಶ್ವಕಪ್‌ನಲ್ಲಿ ಭಾಗವಹಿಸುವುದಿಲ್ಲ: ಪಿಸಿಬಿ ಬೆದರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಫೆಬ್ರುವರಿ 2023, 12:26 IST
Last Updated 5 ಫೆಬ್ರುವರಿ 2023, 12:26 IST
ರೋಹಿತ್ ಶರ್ಮಾ ಮತ್ತು ಬಾಬರ್‌ ಅಜಂ
ರೋಹಿತ್ ಶರ್ಮಾ ಮತ್ತು ಬಾಬರ್‌ ಅಜಂ    

ನವದೆಹಲಿ: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಬೇಕು. ಇಲ್ಲವಾದರೆ ಭಾರತದಲ್ಲಿ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯನ್ನು ಬಹಿಷ್ಕರಿಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಬೆದರಿಕೆ ಹಾಕಿರುವುದಾಗಿ ಮೂಲಗಳು ತಿಳಿಸಿವೆ.

ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಈ ಬಾರಿ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿದ್ದು, ಇದೇ ವರ್ಷದ ಸೆಪ್ಟೆಂಬರ್‌ನಲ್ಲಿ ಆಯೋಜಿಸಲಾಗುವುದು ಎಂದು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಹೇಳಿದೆ.

ಆದರೆ ಟೂರ್ನಿಯ ವೇಳಾಪಟ್ಟಿ ಮತ್ತು ಆತಿಥ್ಯ ವಹಿಸುವ ದೇಶದ ಬಗ್ಗೆ ಮಾರ್ಚ್‌ನಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಎಸಿಸಿ ತಿಳಿಸಿದೆ.

ADVERTISEMENT

ಈ ಬಾರಿಯ ಟೂರ್ನಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಬೇಕು. ಆದರೆ ಪಾಕ್‌ನಲ್ಲಿ ಟೂರ್ನಿ ನಡೆಸಿದರೆ, ಭದ್ರತಾ ಕಾರಣಗಳಿಂದಾಗಿ ತಮ್ಮ ತಂಡವನ್ನು ಅಲ್ಲಿಗೆ ಕಳುಹಿಸುವುದಿಲ್ಲ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಹೇಳಿದೆ.

ಬಿಸಿಸಿಐ ನಿಲುವನ್ನು ಪಿಸಿಬಿ ಮಾಜಿ ಮುಖ್ಯಸ್ಥ ರಮೀಜ್‌ ರಾಜಾ ಟೀಕಿಸಿದ್ದು, ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಟೂರ್ನಿಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.

ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಗಾನಿಸ್ತಾನ ಮತ್ತು ಅರ್ಹತಾ ಹಂತದಲ್ಲಿ ಗೆದ್ದು ಬರುವ ಒಂದು ತಂಡ ಒಳಗೊಂಡಂತೆ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ.

ಕಳೆದ ವರ್ಷ ಏಷ್ಯಾ ಕಪ್ ಟೂರ್ನಿ ಯುಎಇಯಲ್ಲಿ ನಡೆದಿದ್ದು, ಈ ಬಾರಿಯಲ್ಲಿ ಯುಎಇ ಮತ್ತೆ ಆತಿಥ್ಯ ವಹಿಸುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.