ಅಡಿಲೇಡ್: ಆಸ್ಟ್ರೇಲಿಯಾ ವಿರುದ್ದ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಲಾಬಿ ಚೆಂಡಿನ ಮೊದಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ವೈಫಲ್ಯ ಅನುಭವಿಸಿರುವ ಭಾರತ ತಂಡದ ಬಲಗೈ ಯುವ ಆರಂಭಿಕ ಬ್ಯಾಟ್ಸ್ಮನ್ ಪೃಥ್ವಿ ಶಾ ನಿರಾಸೆ ಮೂಡಿಸಿದರು.
ಮೊದಲ ಇನ್ನಿಂಗ್ಸ್ನಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿರುವ ಪೃಥ್ವಿ ಶಾ, ದ್ವಿತೀಯ ಇನ್ನಿಂಗ್ಸ್ನಲ್ಲಿ ನಾಲ್ಕು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಎರಡೂ ಬಾರಿ ಕ್ಲೀನ್ ಬೌಲ್ಡ್ ಆಗಿರುವ ಪೃಥ್ವಿ, ಸತತ ವೈಫಲ್ಯಕ್ಕೊಳಗಾದರು.
ವೃತ್ತಿ ಜೀವನದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಾಧನೆ ಮಾಡಿರುವ ಪೃಥ್ವಿ ಶಾ, ಬಳಿಕ ಗಾಯದಿಂದಾಗಿ ತಂಡದಿಂದ ಹೊರಗುಳಿಯುವಂತಾಯಿತು. ಈಗ ತಂಡವನ್ನು ಸೇರಿದರೂ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ಇದರಿಂದ ಟೀಮ್ ಇಂಡಿಯಾಗೆ ಉತ್ತಮ ಆರಂಭ ನೀಡುವಲ್ಲಿ ವಿಫಲವಾದರು.
ಫೀಲ್ಡಿಂಗ್ನಲ್ಲೂ ಕಳಪೆ ಪ್ರದರ್ಶನ ತೋರಿರುವ ಪೃಥ್ವಿ ಶಾ ಸುಲಭ ಕ್ಯಾಚ್ ಕೈಚೆಲ್ಲುವ ಮೂಲಕ ಸಾಕಷ್ಟು ಟೀಕೆಗೊಳಗಾದರು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಅಭಿಷೇಕವಾಗಿದೆ.
ಟೆಸ್ಟ್ ಆರಂಭಕ್ಕೂ ಮುನ್ನವೇ ಕೆಎಲ್ ರಾಹುಲ್ ಅಥವಾ ಶುಭಮನ್ ಗಿಲ್ ಸ್ಥಾನಕ್ಕೆ ಪೃಥ್ವಿ ಶಾ ಆಯ್ಕೆ ಮಾಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮುಂದಿನ ಪಂದ್ಯದಲ್ಲಿ ಕೈಬಿಡುವ ಎಲ್ಲ ಸಾಧ್ಯತೆಗಳು ಕಂಡುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.