
ದೇವದತ್ತ ಪಡಿಕ್ಕಲ್ ಬ್ಯಾಟಿಂಗ್ –ಪಿಟಿಐ ಚಿತ್ರ
ಬೆಂಗಳೂರು: ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ತಂಡಗಳ ನಡುವಿನ 2025–26ನೇ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯವು ಫೆಬ್ರವರಿ 24ರಿಂದ ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.
ಲಖನೌದಲ್ಲಿ ಮುಕ್ತಾಯಗೊಂಡ ಉತ್ತರಾಖಂಡ ತಂಡದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮೊದಲ ಇನಿಂಗ್ಸ್ನ ಬೃಹತ್ ಮುನ್ನಡೆಯ ನೆರವಿನಿಂದ ಫೈನಲ್ಗೆ ಲಗ್ಗೆ ಇಟ್ಟಿದೆ.
ಇತ್ತ, ಬುಧವಾರ ಕಲ್ಯಾಣಿಯಲ್ಲಿ ಮುಕ್ತಾಯಗೊಂಡ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 6 ವಿಕೆಟ್ಗಳಿಂದ ಸೋಲಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡವು ರಣಜಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.
‘ಫೆಬ್ರವರಿ 24ರಿಂದ 5 ದಿನಗಳ ಕಾಲ ನಡೆಯಲಿರುವ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯವು ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉಂಟಾದ ಅವಘಡದ ಬಳಿಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ದೇಶೀಯ, ಐಪಿಎಲ್ ಮತ್ತು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಸಚಿವ ಸಂಪುಟದಿಂದ ಷರತ್ತುಬದ್ಧ ಅನುಮೋದನೆಯನ್ನು ಪಡೆದುಕೊಂಡಿದೆ. ಇದರ ಹೊರತಾಗಿಯೂ ರಣಜಿ ಫೈನಲ್ ಪಂದ್ಯವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲು ಕೆಎಸ್ಸಿಎ ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.