ಬೆಂಗಳೂರು ಕಾಲ್ತುಳಿತ
ಕೃಪೆ: ಪಿಟಿಐ
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವರದಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆ ಒಪ್ಪಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವರದಿಯ ಶಿಫಾರಸು ಸೂಚಿಸಿದೆ ಎಂದರು.
ಅಲ್ಲದೇ, ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾವಾರು ವಿಚಾರಣೆ ನಡೆಸಲು ಒಳಾಡಳಿತ ಇಲಾಖೆಗೆ ಸೂಚಿಸಲಾಗುವುದು ಎಂದರು.
ಕಾರಣಕರ್ತರು: ಜಾನ್ ಮೈಕಲ್ ಕುನ್ಹಾ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಪ್ರೈವೇಟ್ ಲಿಮಿಟೆಡ್ / ಆರ್ಸಿಬಿ, ಡಿಎನ್ಎ ಎಂಟರ್ಟೇನ್ಮೆಂಟ್, ನೆಟ್ವೆರ್ಕ್, ಕೆಎಸ್ಸಿಎ ಮತ್ತು ಅದರ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎಸ್.ಶಂಕರ್, ಮಾಜಿ ಖಜಾಂಚಿ ಇ.ಎಸ್.ಜಯರಾಮ್, ಆರ್ಸಿಎಸ್ಪಿಎಲ್ನ ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ಎ ಎಂಟರ್ಟೇನ್ಮೆಂಟ್ನ ವ್ಯವಸ್ಥಾಪಕ ನಿರ್ದೇಶಕ ಟಿ. ವೆಂಕಟ ವರ್ಧನ್, ಉಪಾಧ್ಯಕ್ಷ ಸುನಿಲ್ ಮಾಥುರ್.
ಬೆಂಗಳೂರು ನಗರದ ಈ ಹಿಂದಿನ ಪೊಲೀಸ್ ಕಮಿಷನರ್ ಬಿ.ದಯಾನಂದ, ಹಿಂದಿನ ಹೆಚ್ಚುವರಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಹಿಂದಿನ ಡಿಸಿಪಿ ಶೇಖರ್ ಎಚ್.ಟೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಉಪವಿಭಾಗದ ಹಿಂದಿನ ಎಸಿಪಿ ಸಿ.ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್ ಎ.ಕೆ. ಈ ದುರಂತಕ್ಕೆ ಕಾರಣರು ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.