ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಟಿ–20ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕಮಾಡಲಾಗಿದ್ದು, ಜೈಪುರದಲ್ಲಿ ನವೆಂಬರ್ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
16 ಸದಸ್ಯರ ಭಾರತ ತಂಡದಲ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಋತುರಾಜ್ ಗಾಯಕ್ವಾಡ್, ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ ಮತ್ತು ಆಲ್ರೌಂಡರ್ ಸಾಮರ್ಥ್ಯ ಪ್ರದರ್ಶಿಸಿದ್ದ ವೆಂಕಟೇಶ್ ಅಯ್ಯರ್ ಅವರಿಗೆ ಸ್ಥಾನ ನೀಡಲಾಗಿದೆ.
ಟಿ–20 ವಿಶ್ವಕಪ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಋತುರಾಜ್ ಗಾಯಕ್ವಾಡ್ ಅವರು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡಿದ್ದರು.
ಹಿರಿಯ ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್, ವೇಗಿ ಮೊಹಮ್ಮದ್ ಸಿರಾಜ್ ಸಹ ತಂಡದಲ್ಲಿ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಿ–20 ವಿಶ್ವಕಪ್ ಸರಣಿಯಲ್ಲಿ ಹೆಚ್ಚುವರಿ ಆಟಗಾರರಾಗಿದ್ದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಾಹರ್ ಈಗ ಪ್ರಮುಖ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ–20 ಸರಣಿಗೆ ರೋಹಿತ್ ಶರ್ಮಾ ಅವರು ನಾಯಕರಾಗಿದ್ದು, ಕೆ.ಎಲ್. ರಾಹುಲ್ ಉಪನಾಯಕರಾಗಿದ್ದಾರೆ.
ವೇಗಿಗಳಾದ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ–20 ಸರಣಿಗೆ ಆಯ್ಕೆಯಾಗಿರುವ ಭಾರತ ತಂಡ ಇಂತಿದೆ:
ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್(ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ರವಿಂಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.