ನವದೆಹಲಿ: ಗಾಯಗೊಂಡಿರುವ ಶಿಖರ್ ಧವನ್ ಅವರ ಬದಲಿಗೆ ಕೇರಳದ ಸಂಜು ಸ್ಯಾಮ್ಸನ್ ಅವರಿಗೆ ಭಾರತ ಟ್ವೆಂಟಿ–20 ತಂಡದಲ್ಲಿ ಸ್ಥಾನ ನೀಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಆಡಲಿರುವ ತಂಡವನ್ನು ಬುಧವಾರ ಎಂ.ಎಸ್.ಕೆ. ಪ್ರಸಾದ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯು ಪ್ರಕಟಿಸಿತು. ಕರ್ನಾಟಕದ ಕೆ.ಎಲ್. ರಾಹುಲ್ ಮತ್ತು ಮನೀಷ್ ಪಾಂಡೆ ಅವರೂ ತಂಡದಲ್ಲಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ–20 ಟೂರ್ನಿಯಲ್ಲಿ ಮಹಾರಾಷ್ಟ್ರ ಎದುರಿನ ಪಂದ್ಯದಲ್ಲಿ ಗಾಯಗೊಂಡಿದ್ದ ದೆಹಲಿಯ ಶಿಖರ್ ಧವನ್ ಚೇತರಿಸಿಕೊಂಡಿಲ್ಲ. ಅವರ ಎಡ ಮೊಣಕಾಲಿಗೆ ಪೆಟ್ಟು ಬಿದ್ದಿತ್ತು. ಆದ್ದರಿಂದ ಅವರನ್ನು ಆಯ್ಕೆ ಪರಿಗಣಿಸಿಲ್ಲ.
‘ಬಿಸಿಸಿಐ ವೈದ್ಯಕೀಯ ತಂಡವು ಮಂಗಳವಾರ ಧವನ್ ಅವರ ತಪಾಸಣೆ ಮಾಡಿದೆ. ಚೇತರಿಸಿಕೊಳ್ಳಲು ಅವರಿಗೆ ಇನ್ನೂ ಸ್ವಲ್ಪ ಸಮಯ ಬೇಕು ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಈಚೆಗೆ ಬಾಂಗ್ಲಾದೇಶ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗೆ ಒಂದೂ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕಿರಲಿಲ್ಲ. 2015ರಲ್ಲಿ ಹರಾರೆಯಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಸಂಜು ಪದಾರ್ಪಣೆ ಮಾಡಿದ್ದರು. ಅದಾದ ನಂತರ ಮತ್ತೆ ಅವರು ಕಣಕ್ಕಿಳಿದಿಲ್ಲ.
ಡಿಸೆಂಬರ್ 6ರಿಂದ ನಡೆಯಲಿರುವ ಸರಣಿಯಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿವೆ. ಹೈದರಾಬಾದ್ (ಡಿ.6), ತಿರುವನಂತಪುರ (ಡಿ.8) ಮತ್ತು ಮುಂಬೈ (ಡಿ. 11) ನಗರಗಳಲ್ಲಿ ಪಂದ್ಯಗಳು ನಡೆಯಲಿವೆ.
ತಂಡ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್ (ವಿಕೆಟ್ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಾಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಸಂಜು ಸ್ಯಾಮ್ಸನ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.