ADVERTISEMENT

IND vs AUS: ಟಿಕೆಟ್ ಖರೀದಿಗೆ ಮುಗಿಬಿದ್ದ ಕ್ರಿಕೆಟ್ ಅಭಿಮಾನಿಗಳು, ಕಾಲ್ತುಳಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2022, 9:41 IST
Last Updated 22 ಸೆಪ್ಟೆಂಬರ್ 2022, 9:41 IST
ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)
ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)   

ತೆಲಂಗಾಣ: ಹೈದರಾಬಾದ್‌ನಲ್ಲಿ ಸೆ.25ರಂದು (ಭಾನುವಾರ) ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟಿಕೆಟ್ ಖರೀದಿಸಲು ಕ್ರಿಕೆಟ್ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಮೈದಾನದ ಹೊರಗಡೆಕಾಲ್ತುಳಿತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ –ಆಸ್ಟ್ರೇಲಿಯಾ ನಡುವೆ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ.

ADVERTISEMENT

ವಾರಾಂತ್ಯದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ಟಿಕೆಟ್‌ ಖರೀದಿಸಲು ಕ್ರೀಡಾಂಗಣದತ್ತ ಮುಖ ಮಾಡುತ್ತಿದ್ದಾರೆ. ಟಿಕೆಟ್‌ ಖರೀದಿಗಾಗಿ ಅಭಿಮಾನಿಗಳು ಸರತಿ ಸಾಲಿನಲ್ಲಿ ಕಾದು ನಿಂತಿರುವ ದೃಶ್ಯಗಳು ಬುಧವಾರ ಕಂಡು ಬಂದಿತ್ತು.

ಸದ್ಯ ಕ್ರೀಡಾಂಗಣದಲ್ಲಿ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ 1-0ರಲ್ಲಿ ಮುನ್ನಡೆ ಸಾಧಿಸಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 208 ರನ್‌ಗಳ ಬೃಹತ್ ಮೊತ್ತ ಪೇರಿಸಿಯೂ ಸೋಲಿಗೆ ಶರಣಾಯಿತು. ಆಸ್ಟ್ರೇಲಿಯಾ 19.2 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಎರಡನೇ ಟಿ20 ಪಂದ್ಯ ಸೆ.23ರಂದು ಶುಕ್ರವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.