ನವದೆಹಲಿ: ಮುಂದಿನ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆಯಾಗಿ ಮುಖ್ಯಸ್ಥ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಸಭೆ ಸೇರುವ ಸಾಧ್ಯತೆಯಿದೆ. ತಂಡದಲ್ಲಿ ಹೆಚ್ಚುವರಿ ಸ್ಪಿನ್ನರ್ ಸ್ಥಾನ ಪಡೆಯಲು ವರುಣ್ ಚಕ್ರವರ್ತಿ ಮತ್ತು ರಾಹುಲ್ ಚಾಹರ್ ಮಧ್ಯೆ ಪೈಪೋಟಿ ನಡೆಯಲಿದೆ.
ಆಯ್ಕೆ ಸಮಿತಿಯು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮುಖ್ಯ ಕಚೇರಿ ಇರುವ ಮುಂಬೈನಲ್ಲಿ ಸಭೆ ಸೇರಲಿದ್ದು, ಮ್ಯಾಂಚೆಸ್ಟರ್ನಲ್ಲಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಲಂಡನ್ನಲ್ಲಿರುವ ಕೋಚ್ ರವಿ ಶಾಸ್ತ್ರಿ ಅವರನ್ನು ಮಂಗಳವಾರ ಅಥವಾ ಬುಧವಾರ ಸಂಪರ್ಕಿಸುವ ನಿರೀಕ್ಷೆಯಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ (ಆಯ್ಕೆ ಸಮಿತಿಯ ಸಂಚಾಲಕ) ಅವರು ಆಯ್ಕೆ ಸಮಿತಿಯ ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಹೆಚ್ಚಿನ ತಂಡಗಳು 15 ಸದಸ್ಯರ ತಂಡಗಳನ್ನು ಪ್ರಕಟಿಸುತ್ತಿವೆ. ಆದರೆ ಬಿಸಿಸಿಐ 18 ಅಥವಾ 20 ಸದಸ್ಯರ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಏಕೆಂದರೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕೋವಿಡ್ ಕಾರಣದಿಂದಾಗಿ, 30 ಮಂದಿಯ ತಂಡವನ್ನು ಕೊಂಡೊಯ್ಯಲು ಅವಕಾಶ ನೀಡಿದೆ. ಈ ಸಂಖ್ಯೆಯು ನೆರವು ಸಿಬ್ಬಂದಿಯನ್ನೂ ಒಳಗೊಂಡಿದೆ. ಈ ಹಿಂದಿನ ಆವೃತ್ತಿಗಳಿಗೆ 23 ಮಂದಿಯ ತಂಡಕ್ಕೆ ಮಾತ್ರ ಅವಕಾಶವಿತ್ತು.
ಇಬ್ಬರು ಸ್ಪಿನ್ನರ್ಗಳಾಗಿ ಯಜುವೇಂದ್ರ ಚಾಹಲ್ ಮತ್ತು ರವೀಂದ್ರ ಜಡೇಜ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.