
ವಿರಾಟ್ ಕೊಹ್ಲಿ
(ಪಿಟಿಐ ಚಿತ್ರ)
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಚುಟುಕು ಮಾಹಿತಿ ನೀಡಿರುವ ಅವರು, ‘ಎಲ್ಲಾ ಇಲಾಖೆಗಳ ವರದಿ ಆಧರಿಸಿ ಪಂದ್ಯ ನಡೆಸಲು ಅನುಮತಿ ಕೋರಿದ ಕೆಎಸ್ಸಿಎ ಮನವಿಯನ್ನು ತಿರಸ್ಕರಿಸಲಾಗಿದೆ’ ಎಂದಿರುರ ಅವರು ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ ಎಂದಿದ್ದಾರೆ.
ಕೊಹ್ಲಿ ಆಡಬೇಕಿದ್ದ ಪಂದ್ಯ...
ಡಿಸೆಂಬರ್ 24ರಂದು ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಡಿ ಗುಂಪಿನಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿತ್ತು.
ದೆಹಲಿ ತಂಡವನ್ನು ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಭಾಗವಹಿಸಬೇಕಿತ್ತು.
ವಿರಾಟ್ ಅವರಿಗೆ ಬೆಂಗಳೂರು ಎರಡನೇ ತವರು ಇದ್ದಂತೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅವರು ಆರಂಭದಿಂದಲೂ ಆಡುತ್ತಿದ್ದಾರೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆಯಿತ್ತು.
ಕಳೆದ ಜೂನ್ 4ರಂದು ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದರು. ಆಗಿನಿಂದ ಇಲ್ಲಿಯವರೆಗೆ ಕ್ರೀಡಾಂಗಣದಲ್ಲಿ ಬಿಸಿಸಿಐ ಮತ್ತು ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.
ವಿರಾಟ್ ಅವರು 2010ರಲ್ಲಿ ಕೊನೆಯ ಬಾರಿಗೆ ವಿಜಯ್ ಹಜಾರೆ ಟೂರ್ನಿಯಲ್ಲಿ ಆಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.