ADVERTISEMENT

ಕೇಂದ್ರ ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿದ ಇಂಗ್ಲೆಂಡ್‌ ಮಾಜಿ‌ ಕ್ರಿಕೆಟಿಗ ಪನೇಸರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ನವೆಂಬರ್ 2020, 6:57 IST
Last Updated 30 ನವೆಂಬರ್ 2020, 6:57 IST
ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್
ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್   

ನವದೆಹಲಿ: ಭಾರತ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಕೃಷಿ ಕಾಯ್ದೆಗಳನ್ನು ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಪ್ರಶ್ನೆ ಮಾಡಿದ್ದಾರೆ.

'ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ', 'ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ' ಮತ್ತು 'ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆ'ಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣದ ರೈತರು ದೆಹಲಿ ಸಮೀಪದ ಸಿಂಗು ಬಾರ್ಡರ್‌ ಬಳಿ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಮಾಂಟಿ ಪನೇಸರ್‌ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಟ್ವೀಟ್‌ ಮಾಡಿದ್ದಾರೆ.

'ಒಪ್ಪಂದದ ಪ್ರಕಾರ ಕೃಷಿ ಉತ್ಪನ್ನಗಳ ಗುಣಮಟ್ಟ ಇಲ್ಲವೆಂಬ ಕಾರಣವನ್ನು ಮುಂದಿಟ್ಟು ಖರೀದಿದಾರನು ಒಪ್ಪಂದಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದರೆ ಏನಾಗಬಹುದು? ಹಾಗೇನಾದರೂ ಆದರೆ, ರೈತರಿಗೆ ಯಾವ ಭದ್ರತೆ ಸಿಗುತ್ತದೆ? ಬೆಲೆ ನಿಗದಿ ಬಗ್ಗೆ ಯಾವುದೇ ಉಲ್ಲೇಖವಿಲ್ಲ?' ಎಂದು ಪನೇಸರ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಈ ಟ್ವೀಟ್‌ ಅನ್ನು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್‌ ಮಾಡಿದ್ದಾರೆ ಪನೇಸರ್‌.

ಇದಿಷ್ಟೇ ಅಲ್ಲದೇ, ಅವರ 'ಮಾಂಟಿ ಚಾನೆಲ್‌' ಮೂಲಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.