ADVERTISEMENT

ಎರಡೇ ದಿನಗಳಲ್ಲಿ ಫಲಿತಾಂಶ ಟೆಸ್ಟ್ ಕ್ರಿಕೆಟ್‌ಗೆ ಉತ್ತಮವಲ್ಲ: ಯುವರಾಜ್ ಸಿಂಗ್

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 2:24 IST
Last Updated 26 ಫೆಬ್ರುವರಿ 2021, 2:24 IST
ಯುವರಾಜ್ ಸಿಂಗ್ (ಎಎಫ್‌ಪಿ ಚಿತ್ರ)
ಯುವರಾಜ್ ಸಿಂಗ್ (ಎಎಫ್‌ಪಿ ಚಿತ್ರ)   

ಅಹಮದಾಬಾದ್: ಇಂಗ್ಲೆಂಡ್–ಭಾರತ ತಂಡಗಳ ನಡುವಣ ಟೆಸ್ಟ್ ಪಂದ್ಯ ಎರಡೇ ದಿನಗಳಲ್ಲಿ ಫಲಿತಾಂಶ ಕಂಡಿರುವುದಕ್ಕೆ ಕೆಲವು ಹಿರಿಯ ಆಟಗಾರರಿಂದ ಪಿಚ್ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ.

ಎರಡೇ ದಿನಗಳಲ್ಲಿ ಫಲಿತಾಂಶ ಟೆಸ್ಟ್ ಕ್ರಿಕೆಟ್‌ಗೆ ಉತ್ತಮವಲ್ಲ ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಎರಡೇ ದಿನಗಳಲ್ಲಿ ಫಲಿತಾಂಶ ಬಂದಿರುವುದು ಟೆಸ್ಟ್ ಕ್ರಿಕೆಟ್‌ನ ದೃಷ್ಟಿಯಿಂದ ಒಳ್ಳೆಯದಲ್ಲ. ಇಂಥ ಪಿಚ್‌ನಲ್ಲಿ ಅನಿಲ್ ಕುಂಬ್ಳೆ ಅಥವಾ ಹರಭಜನ್ ಸಿಂಗ್ ಬೌಲಿಂಗ್ ಮಾಡಿದ್ದಿದ್ದರೆ ಅವರ ವಿಕೆಟ್ ಗಳಿಗೆ ಈಗ 1000 ಹಾಗೂ 800 ಆಗಿರುತ್ತಿತ್ತು ಎಂದು ಯೋಚಿಸುತ್ತಿದ್ದೇನೆ. ಆದಾಗ್ಯೂ ಉತ್ತಮ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್, ಅಶ್ವಿನ್ ಹಾಗೂ ಇಶಾಂತ್‌ಗೆ ಅಭಿನಂದನೆಗಳು’ ಎಂದು ಉಲ್ಲೇಖಿಸಿದ್ದಾರೆ.

ADVERTISEMENT

ಮೊಟೇರಾ ಪಿಚ್‌ ಟೆಸ್ಟ್‌ ಕ್ರಿಕೆಟ್‌ಗೆ ಸೂಕ್ತವಲ್ಲ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮತ್ತು ಹರಭಜನ್ ಸಿಂಗ್ ಗುರುವಾರ ಅಭಿಪ್ರಾಯಪಟ್ಟಿದ್ದರು. ಆದರೆ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾತ್ರ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಿಚ್‌ ಉತ್ತಮವಾಗಿಯೇ ಇದೆ. ಆದರೆ, ಬ್ಯಾಟ್ಸ್‌ಮನ್‌ಗಳು ಕೌಶಲಭರಿತ ಮತ್ತು ಉತ್ತಮ ದರ್ಜೆಯ ಆಟವಾಡಲಿಲ್ಲ ಎಂದು ಅವರು ಹೇಳಿದ್ದಾರೆ. ‘ಪಿಚ್ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಿರ್ಧರಿಸಬೇಕು. ಆಟಗಾರರಲ್ಲ’ ಎಂದು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಕೂಡ ಹೇಳಿದ್ದಾರೆ.

ಗುರುವಾರ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಪ್ರವಾಸಿ ಇಂಗ್ಲೆಂಡ್ ವಿರುದ್ದ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 2-1ರ ಅಂತರದ ಮುನ್ನಡೆ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.