ಯಲಹಂಕ: ಬಾಗಲೂರಿನ ನವೋದಯ ವಿದ್ಯಾಲಯದಲ್ಲಿ ಏರ್ಪಡಿಸಿರುವ ಮೂರು ದಿನಗಳ 22ನೇ ರಾಷ್ಟ್ರೀಯ ಬಿಲ್ಲುಗಾರಿಕೆ ಕೂಟಕ್ಕೆ ಶಾಸಕ ಕೃಷ್ಣಬೈರೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ನವೋದಯ ವಿದ್ಯಾಲಯಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಈ ಶಾಲೆಗಳ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವುದು ಇದಕ್ಕೆ ನಿದರ್ಶನ. ಬಿಲ್ಲುಗಾರಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಏಕಾಗ್ರತೆ ಮೂಡುವುದರ ಜೊತೆಗೆ ತಮ್ಮ ಕಾರ್ಯಗಳಲ್ಲಿ ಗುರಿಮುಟ್ಟಲು ಸಾಧ್ಯವಾಗುತ್ತದೆ’ ಎಂದರು.
ಕೂಟದಲ್ಲಿ 308 ಸ್ಪರ್ಧಾಳುಗಳು ಪಾಲ್ಗೊಂಡಿದ್ದಾರೆ. 14, 16 ಮತ್ತು 18 ವರ್ಷಗಳ ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ 20, 40 ಮತ್ತು 60 ಮೀಟರ್ ಅಂತರದ ಭಾರತೀಯ ಮತ್ತು ಆಧುನಿಕ ಬಿಲ್ಲುಗಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ನವೋದಯ ವಿದ್ಯಾಲಯ ಸಮಿತಿಯ ಹೈದರಾಬಾದ್ ವಲಯದ ಸಹಾಯಕ ಆಯುಕ್ತ ರಾಘವನ್ ಕಾವಲನ್ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.