ADVERTISEMENT

ರಾಜ್ಯ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷ ಗೋರೆ ನಿಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 6:39 IST
Last Updated 1 ಮಾರ್ಚ್ 2021, 6:39 IST
ಶ್ರೀಧರ ಮಾರುತಿರಾವ್ ಗೋರೆ
ಶ್ರೀಧರ ಮಾರುತಿರಾವ್ ಗೋರೆ    

ವಿಜಯಪುರ: ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷ ಶ್ರೀಧರ ಮಾರುತಿರಾವ್ ಗೋರೆ (66) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಇಲ್ಲಿನ ನಿವಾಸಿಯಾದ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕಳೆದ 21 ವರ್ಷಗಳಿಂದ ಅವರು ರಾಜ್ಯ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷರಾಗಿದ್ದರು. ಪ್ರತಿ ಬಾರಿಯೂ ಅವಿರೋಧವಾಗಿ ಆಯ್ಕೆಯಾಗಿದ್ದು ವಿಶೇಷ.

ಭಾರತ ಸೈಕ್ಲಿಂಗ್ ಫೆಡರೇಷನ್‌ ‌ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಉಪಾಧ್ಯಕ್ಷರೂ ಆಗಿದ್ದರು.

ADVERTISEMENT

2005ರಲ್ಲಿ ಫ್ರಾನ್ಸ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಸೈಕ್ಲಿಂಗ್ ಚಾಂಪಿಯನ್ ಷಿಪ್‌ಗೆ ಭಾರತ ತಂಡದ ವ್ಯವಸ್ಥಾಪಕರಾಗಿ ತೆರಳಿದ್ದರು. 2002ರಲ್ಲಿ ಬೆಳಗಾವಿಯಲ್ಲಿ, 2006ರಲ್ಲಿ ವಿಜಯಪುರಲ್ಲಿ, 2008, 2014 ಹಾಗೂ 2017ರಲ್ಲಿ ಜಮಖಂಡಿಯಲ್ಲಿ ಮೋರೆ ಅವರ ಮುಂದಾಳತ್ವದಲ್ಲಿ ರಾಷ್ಟ್ರೀಯ ಸೈಕ್ಲಿಂಗ್ ಚಾಂಪಿಯನ್ ಷಿಪ್ ನಡೆದಿತ್ತು.

ಇತ್ತೀಚೆಗೆ ಗದಗನಲ್ಲಿ ಜರುಗಿದ್ದ ಚೊಚ್ಚಲ ರಾಷ್ಟ್ರೀಯ ಮೌಂಟೆನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಷಿಪ್ ಯಶಸ್ವಿಗೊಳಿಸುವಲ್ಲಿ ಶ್ರಮಿಸಿದ್ದರು.‌ ಅಲ್ಲಿನ ಟೂರ್ನಿ ಬಳಿಕ ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಯಲ್ಲಿ ಎರಡು ದಿನ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಅಂತಿಮ ದರ್ಶನ ಪಡೆದ ಸಚಿವ

ವಿಜಯಪುರ ನಗರದಲ್ಲಿರುವ ಶ್ರೀಧರ್ ಗೋರೆಅವರ ನಿವಾಸಕ್ಕೆ ತೆರಳಿ ಸಚಿವ ಡಾ. ನಾರಾಯಣಗೌಡ ಅವರು ಮೃತರ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡಿದ್ದರು. ಅವರ ಅಗಲಿಕೆ ಕ್ರೀಡಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ. ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲಿ, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ದುಖಃ ಭರಿಸುವ ಶಕ್ತಿಯನ್ನ ಭಗವಂತ ನೀಡಲಿ ಎಂದು ಸಚಿವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.