ADVERTISEMENT

ಚೋಪ್ರಾಗೆ ತರಬೇತಿ ನೀಡಿದ್ದ ಕಾಶೀನಾಥ್‌ಗೆ ₹ 10 ಲಕ್ಷ ಬಹುಮಾನ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 20:05 IST
Last Updated 8 ಆಗಸ್ಟ್ 2021, 20:05 IST

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಜಾವೆಲಿನ್‌ ಥ್ರೋದಲ್ಲಿ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ ಅವರಿಗೆ ತರಬೇತಿ ನೀಡಿದ್ದ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಕಾಶೀನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ₹ 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

‘ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗಕಾಶೀನಾಥ್ ನಾಯ್ಕ್ ಪಾತ್ರವೂ ಇದೆ. 2010ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಾಶೀನಾಥ್ ಜಾವೆಲಿನ್‌ ಥ್ರೋದಲ್ಲಿ ಕಂಚಿನ ಪದಕ‌ ಗಳಿಸಿದ್ದರು. ಕ್ರೀಡಾ ಸಾಧಕ ಕಾಶೀನಾಥ್ ಗರಡಿಯಲ್ಲಿ ಪಳಗಿದ ನೀರಜ್, ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ.

‘ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅಮೋಘ ಸಾಧನೆ ಮಾಡಿದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದಿಂದ ಸನ್ಮಾನಿಸಲಾಗುವುದು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಇದೇ ಸಂದರ್ಭದಲ್ಲಿ ಕಾಶಿನಾಥ್ ಅವರನ್ನೂ ಸನ್ಮಾನಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದೂ ದೊಡ್ಡ ಸಾಧನೆ. ಟೋಕಿಯೊ ಒಲಿಂಪಿಕ್‌ನಲ್ಲಿ ಉತ್ತಮ ಸಾಧನೆ ತೋರಿದ ಕನ್ನಡಿಗರಾದ ಅದಿತಿ ಅಶೋಕ್, ಶ್ರೀಹರಿ ನಟರಾಜ್, ಫವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು‌’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.