ಬೆಂಗಳೂರು: ‘ರಾಜ್ಯದ ಪ್ರತಿ ಗ್ರಾಮದಲ್ಲಿ ಅಳವಡಿಸಲಾಗುವ ಮುಕ್ತ ವ್ಯಾಯಾಮ ಶಾಲೆಗೆ (ಓಪನ್ ಜಿಮ್) ಹೆಚ್ಚು ಅನುದಾನ ಒದಗಿಸಲು ಸಿದ್ಧ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಇಲಾಖೆಯ ಅಧಿಕಾರಿಗಳ ಜೊತೆ ಒಂದು ತಾಸಿಗೂ ಹೆಚ್ಚು ಕಾಲ ಸಭೆ ನಡೆಸಿದ ನಂತರ ಅವರು ‘ಪ್ರಜಾವಾಣಿ’ ಜೊತೆ ಮಾತನಾಡಿದರು.
‘ಓಪನ್ ಜಿಮ್ಗೆ ಸದ್ಯ ₹ 250 ಕೋಟಿ ಮೊತ್ತವನ್ನು ತೆಗೆದಿರಿಸಲಾಗಿದೆ. ಇನ್ನಷ್ಟು ಮೊತ್ತ ಬೇಕೆಂದರೆ ಒದಗಿಸಲು ಸಿದ್ಧ. ಫಿಟ್ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ ಯುವ ಸಮುದಾಯದ ಫಿಟ್ನೆಸ್ಗೆ ಆದ್ಯತೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.
ವಿಜಯಪುರದಲ್ಲಿ ಸೈಕ್ಲಿಂಗ್ ವೆಲೊಡ್ರೋಮ್ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಉಪಾಧ್ಯಕ್ಷ ರಾಜು ಬಿರಾದಾರ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ‘ಈಗಾಗಲೇ ₹ 6 ಕೋಟಿ ವೆಚ್ಚ ಮಾಡಲಾಗಿದೆ. ಅದು ಪೋಲಾಗಬಾರದು. ಆದ್ದರಿಂದ ಇನ್ನಷ್ಟು ವೇಗವಾಗಿ ಕಾಮಗಾರಿ ಮುಗಿಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.