ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಡೆಸುತ್ತಿರುವ ಕುದುರೆ ರೇಸ್ ಹಾಗೂ ಇತರ ಎಲ್ಲ ಚಟುವಟಿಕೆಗಳನ್ನು ಡಿಸೆಂಬರ್ 2 ರಿಂದ ಸ್ಥಗಿತಗೊಳಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೂಚನೆ ನೀಡಿದೆ.
‘ಟರ್ಫ್ ಕ್ಲಬ್ ಅನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಸೂಚನೆ ನೀಡಲಾಯಿತು’ ಎಂದು ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘2017–18ನೇ ಸಾಲಿನ ಅಂತ್ಯದ ವರೆಗೆ ₹32.86 ಕೋಟಿ ಬಾಡಿಗೆಯನ್ನು ಕ್ಲಬ್ ಬಾಕಿ ಉಳಿಸಿಕೊಂಡಿದ್ದು, ವಸೂಲಿಗೆ ಕ್ರಮ ವಹಿಸಬೇಕು. ಇದೇ ತಿಂಗಳ 30ರ ಒಳಗೆ ಪಾವತಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಸುಪ್ರೀಂಕೋರ್ಟ್ನಲ್ಲಿ ಟರ್ಫ್ ಕ್ಲಬ್ ದಾಖಲಿಸಿರುವ ಮೊಕದ್ದಮೆಯನ್ನು ಶೀಘ್ರ ಇತ್ಯರ್ಥಗೊಳಿಸಲು ಕ್ರಮವಹಿಸಬೇಕು.ಈ ಸಂಬಂಧ ಡಿಸೆಂಬರ್ ಮೊದಲನೇ ವಾರದಲ್ಲಿ ಸಮಿತಿಗೆ ವರದಿ ಸಲ್ಲಿಸುವಂತೆ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಯಿತು’ ಎಂದು ಅವರು ವಿವರಿಸಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ಟರ್ಫ್ ಕ್ಲ ಬ್ಅನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸಲು ಹಿಂದಿನ ಸರ್ಕಾರಗಳು ನಿರ್ಧಾರ ಕೈಗೊಂಡಿದ್ದರೂ, ಅದರ ಜಾರಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗದಿರುವ ಬಗ್ಗೆ ಚರ್ಚಿಸಲಾಯಿತು. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸಭೆಗೆ ತಿಳಿಸಿದ್ದಾಗಿ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.