ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಥ್ಲೀಟ್ ನೀರಜ್ ಚೋಪ್ರಾ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನೀರಜ್, ನವದೆಹಲಿಯ ಜಂತರ್ ಮಂತರ್ನಲ್ಲಿ ಏನು ನಡೆಯುತ್ತಿದೆಯೋ ಅದು ಆಗಬಾರದಿತ್ತು. ಅಲ್ಲದೆ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ನಮ್ಮ ಅಥ್ಲೀಟ್ಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದು ತುಂಬಾ ನೋವನ್ನುಂಟು ಮಾಡಿದೆ. ಅವರು ನಮ್ಮ ದೇಶವನ್ನು ಪ್ರತಿನಿಧಿಸಲು ಹಾಗೂ ಹೆಮ್ಮೆ ತರಲು ಸಾಕಷ್ಟು ಪರಿಶ್ರಮ ವಹಿಸಿದ್ದಾರೆ. ಕ್ರೀಡಾಪಟು ಆಗಿದ್ದರೂ ಅಲ್ಲದಿದ್ದರೂ ಒಂದು ದೇಶವಾಗಿ ಪ್ರತಿಯೊಬ್ಬರ ಘನತೆ ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.
ಇದೊಂದು ಸೂಕ್ಷ್ಮ ವಿಷಯವಾಗಿದ್ದು ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸಬೇಕಿದೆ. ನ್ಯಾಯವನ್ನು ಒದಗಿಸುವುದನ್ನು ಖಾತ್ರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.