ನವದೆಹಲಿ: ಮುಂದಿನ ಎರಡು ಒಲಿಂಪಿಕ್ಸ್ನಲ್ಲಿ ಹೆಚ್ಚು ಪದಕಗಳನ್ನು ಗೆಲ್ಲುವ ನಿರೀಕ್ಷೆಯೊಂದಿಗೆ ಟಾರ್ಗೆಟ್ ಒಲಿಂಪಿಕ್ ಪೋಡಿಯಂ (ಟಾಪ್) ಯೋಜನೆಗೆ ಆದ್ಯತೆ ನೀಡಲಾಗುವುದು ಮತ್ತು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾನುವಾರ ತಿಳಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕಗಳನ್ನು ಗೆದ್ದವರಿಗೆ ನಗದು ಬಹುಮಾನ ನೀಡಲು ಭಾರತ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾವೆಲಿನ್ ಥ್ರೋದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರಿಗೆ ₹ 75 ಲಕ್ಷ ಮೊತ್ತದ ಚೆಕ್ ಹಸ್ತಾಂರಿಸಲಾಯಿತು. ಬೆಳ್ಳಿ ಪದಕ ಗೆದ್ದ ಕುಸ್ತಿಪಟು ರವಿ ದಹಿಯಾ ಮತ್ತು ವೇಟ್ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ತಲಾ ₹ 50 ಲಕ್ಷ ಮೊತ್ತದ ಚೆಕ್ ನೀಡಲಾಯಿತು.
ಕಂಚಿನ ಪದಕ ಗಳಿಸಿದ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು, ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಮತ್ತು ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ತಲಾ ₹ 25 ಲಕ್ಷ ಮೊತ್ತದ ಚೆಕ್ ವಿತರಿಸಲಾಯಿತು. ಕಂಚಿನ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ತಲಾ ₹ 10 ಲಕ್ಷ, ನೀರಜ್ ಚೋಪ್ರಾ ಕೋಚ್ಗೆ ₹ 12.5 ಲಕ್ಷ, ಬೆಳ್ಳಿ ಪದಕ ಗೆದ್ದವರ ಕೋಚ್ಗಳಿಗೆ ₹ 10 ಲಕ್ಷ ಮತ್ತು ಕಂಚಿನ ಪದಕ ಗಳಿಸಿದವರ ಕೋಚ್ಗಳಿಗೆ ₹ 7.5 ಲಕ್ಷ ಮತ್ತು ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ತಲಾ ₹ ಒಂದು ಲಕ್ಷ ನೀಡಲು ನಿರ್ಧರಿಸಲಾಗಿದೆ.
ಕೆಂಪುಕೋಟೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಒಲಿಂಪಿಯನ್ಸ್ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.