ನವದೆಹಲಿ (ಪಿಟಿಐ): ‘ಎಲ್ಲರೂ ಮನೆಯಲ್ಲಿ ಸುರಕ್ಷಿತವಾಗಿರಿ. ‘ಬಲವಂತ’ದ ರಜೆಯಲ್ಲಿ ಧನಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಪ್ರಯತ್ನಿಸಿ’ ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದೆ.
‘ಕೊರೊನಾ ಸೋಂಕು ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಈ ವೈರಾಣು ವೇಗವಾಗಿ ಹರಡುವುದನ್ನು ತಡೆಗಟ್ಟಲು ಇರುವ ಏಕೈಕ ಮಾರ್ಗ ಪ್ರತ್ಯೇಕ ವಾಸ. ಹೀಗಾಗಿ ಎಲ್ಲರೂ ಮನೆಯಲ್ಲಿ ಇರಿ. ಕ್ರೀಡಾಪಟುಗಳು, ಕೋಚ್ಗಳು ಹಾಗೂ ನೆರವು ಸಿಬ್ಬಂದಿಯ ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ’ ಎಂದು ಬಿಎಐ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ.
ಕೊರೊನಾ ಭೀತಿಯಿಂದಾಗಿ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಏಪ್ರಿಲ್ 12ರವರೆಗೆ ಯಾವುದೇ ಟೂರ್ನಿಗಳನ್ನು ನಡೆಸದಿರಲು ನಿರ್ಧರಿಸಿದೆ.
ರಾಷ್ಟ್ರೀಯ ಚಾಂಪಿಯನ್ಷಿಪ್ಗೆ ತಡೆ: ‘ಕೋವಿಡ್–19 ಪಿಡುಗಿನಿಂದಾಗಿ ಮುಂಬರುವ ರಾಷ್ಟ್ರೀಯ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ ಅನ್ನು ನಿಗದಿತ ದಿನಗಳಂದು ನಡೆಸದಿರಲು ತೀರ್ಮಾನಿಸಿದ್ದೇವೆ’ ಎಂದು ಬಿಎಐ ಮಂಗಳವಾರ ತಿಳಿಸಿದೆ.
ಏಪ್ರಿಲ್ 27ರಿಂದ ಮೇ 3ರವರೆಗೆ ಲಖನೌದಲ್ಲಿ ಚಾಂಪಿಯನ್ಷಿಪ್ ಆಯೋಜನೆಯಾಗಿತ್ತು.
‘ಸೀನಿಯರ್ ರಾಷ್ಟ್ರೀಯ ಚಾಂಪಿಯನ್ಷಿಪ್ ಹಾಗೂ ಅಂತರ ವಲಯ ಚಾಂಪಿಯನ್ಷಿಪ್ಗಳನ್ನು ಸದ್ಯಕ್ಕೆ ನಡೆಸದಿರಲು ನಿರ್ಧರಿಸಿದ್ದೇವೆ. ಲಖನೌಗೆ ಬರಲು ಯಾರೂ ವಿಮಾನದ ಟಿಕೆಟ್ ಕಾಯ್ದಿರಿಸಬೇಡಿ ಎಂದು ಎಲ್ಲಾ ರಾಜ್ಯ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ’ ಎಂದು ಅಜಯ್ ಸಿಂಘಾನಿಯಾ ನುಡಿದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.