
ಬಿಗ್ ಬಾಸ್ ಸ್ಪರ್ಧಿ ರಜತ್
ಮೈಸೂರು: ಅನುಮತಿ ಪಡೆಯದೆ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಚಿತ್ರೀಕರಣ ಮಾಡಿದ್ದಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿರುವ ಬಿಗ್ ಬಾಸ್ ಸ್ಪರ್ಧಿ ರಜತ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇವಾ ಪಡೆ ಪದಾಧಿಕಾರಿಗಳು ಲಕ್ಷ್ಮೀಪುರಂ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮೈಸೂರಿನ ಪಾರಂಪರಿಕ ಕಟ್ಟಡವಾದ ಡಿಸಿ ಕಚೇರಿ ಮುಂಭಾಗದಲ್ಲಿ ವಿಲನ್ ಲುಕ್ನಲ್ಲಿ ಸಿಗರೇಟ್ ಸೇದುತ್ತಾ ಶೂಟ್ ಮಾಡಿಸಿಕೊಂಡಿರುವ ವಿಡಿಯೊವನ್ನು ರಜತ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಹೀಗೆ ಧೂಮಪಾನ ಮಾಡುವುದು ಕಾನೂನು ಬಾಹಿರವಾಗಿದೆ. ಈ ರೀತಿಯ ವಿಡಿಯೊಗಳನ್ನು ಅಪ್ಲೋಡ್ ಮಾಡುವ ಮುಖಾಂತರ ಅವರ ಅಭಿಮಾನಿಗಳಿಗೆ ಯಾವ ಸಂದೇಶ ನೀಡಲು ಹೊರಟಿದ್ದಾರೆ ಎಂದು ದೂರಿನಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೇ ಇಂತಹ ರೀಲ್ಸ್ಗಳಿಂದ ಯುವಕರ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ ಹಾಗಾಗಿ ಕೂಡಲೇ ರಜತ್ ಅವರ ವಿರುದ್ಧ ಕ್ರಮವಹಿಸುವಂತೆ ಮನವಿ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಮಚ್ಚು, ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಜೈಲು ಸೇರಿದ್ದರು. ಹೀಗಿದ್ದರೂ ಇವರಿಗೆ ಬುದ್ದಿ ಬಂದಿಲ್ಲ. ಮತ್ತೆ ತಮ್ಮ ಅದೇ ಚಾಳಿಯನ್ನು ಮುಂದುವರಿಸಿದ್ದಾರೆ. ಹಾಗಾಗಿ ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದ ವೇದಿಕೆ ಅಧ್ಯಕ್ಷ ತೇಜಸ್ ಲೋಕೇಶ್ಗೌಡ, ಪದಾಧಿಕಾರಿಗಳಾದ ಪರಿಸರ ಚಂದ್ರು, ಬಸವರಾಜು, ಶಾಂತಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.