ಬೆಂಗಳೂರು: ಟ್ವಿಟರ್ನಲ್ಲಿ ಪ್ರಕಟವಾದ ವಿಡಿಯೊವೊಂದಕ್ಕೆ ಸಂಬಂಧಿಸಿದಂತೆ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನಿಶ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದನ್ನು ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ನಿವಾಸಿ ಆಗಿರುವ ಮನಿಶ್ ಮಹೇಶ್ವರಿ ಅರ್ಜಿ ಸಲ್ಲಿಸಿದ್ದರು.
ಹಲವು ಪತ್ರಕರ್ತರು ಮತ್ತು ಕಾಂಗ್ರೆಸ್ ಮುಖಂಡರು ಟ್ವಿಟರ್ನಲ್ಲಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮನಿಶ್ ವಿರುದ್ಧ ದೂರು ದಾಖಲಾಗಿದೆ.
ಸಿಆರ್ಪಿಸಿ ಸೆಕ್ಷನ್ 160ರ ಅಡಿಯಲ್ಲಿ ಪೊಲೀಸರು ಜೂನ್ 17ರಂದು ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ಗೆ ಪ್ರತಿಕ್ರಿಯಿಸಿದ ಮನಿಶ್, ವಿಡಿಯೊ ಕಾನ್ಫರೆನ್ಸ್ ಮೂಲಕ ತನಿಖೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಬಳಿಕ ಮತ್ತೊಂದು ನೋಟಿಸ್ ನೀಡಿರುವ ಪೊಲೀಸರು, ಠಾಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶನ ನೀಡಿದ್ದರು.
‘ಅರ್ಜಿದಾರರು ಟ್ವಿಟರ್ ಕಂಪನಿಯ ಆಡಳಿತ ಮಂಡಳಿಯ ನಿರ್ದೇಶಕರಲ್ಲ. ಕಂಪನಿಯಲ್ಲಿ ಜಾಹೀರಾತು ವಿಭಾಗದ ಒಬ್ಬ ಉದ್ಯೋಗಿಯಷ್ಟೇ. ಅವರ ಸಾಕ್ಷಿದಾರರಷ್ಟೇ ಹೊರತು ಆರೋಪಿಯಲ್ಲ’ ಎಂದು ಅರ್ಜಿದಾರರ ಪರ ವಕೀಲ ಸಿ.ವಿ. ನಾಗೇಶ್ ವಾದಿಸಿದರು.
‘ಅರ್ಜಿದಾರರನ್ನು ತನಿಖೆ ಒಳಪಡಿಸಲು ಪೊಲೀಸರು ಬಯಸಿದರೆ, ಅದು ವರ್ಚುವಲ್ ಮಾದರಿಯಲ್ಲಿ ನಡೆಸಲು ಸಾಧ್ಯವಿದೆ’ ಎಂದು ತಿಳಿಸಿದ ಪೀಠ, ಜೂನ್ 29ಕ್ಕೆ ವಿಚಾರಣೆ ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.