ನವದೆಹಲಿ: ಭಾರತದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ತಾತ್ಕಾಲಿಕ ಸಂವಹನ ಸ್ಥಗಿತಗೊಳಿಸುವ ಪ್ರಕ್ರಿಯೆ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಮಿಶೆಲ್ ಬಶ್ಲೆಟ್ ಪ್ರಸ್ತಾಪಿಸಿದ್ದಾರೆ.
ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಜಮ್ಮು–ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ.
‘ಆದರೆ ಭಾರತದ ನಿರ್ಬಂಧಿತ ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು. ಅಲ್ಲದೆ ಮತ್ತಷ್ಟು ಅಸಮಾಧಾನ, ಉದ್ವಿಗ್ನತೆಯನ್ನು ಉಂಟು ಮಾಡಬಹುದು’ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆ ಸೇರುವುದಕ್ಕೆ ಭಾರತೀಯ ಅಧಿಕಾರಿಗಳು ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಅಲ್ಲದೆ ಪದೇ ಪದೇ ತಾತ್ಕಾಲಿಕವಾಗಿ ಸಂವಹನ ಸ್ಥಗಿತಗೊಳಿಸುವುದು ಮುಂದುವರಿದೆ. ನೂರಾರು ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಬಂಧಿಸಲಾಗಿದೆ. ಪತ್ರಕರ್ತರ ಮೇಲೂ ಒತ್ತಡ ಹೆಚ್ಚಿದೆ ಎಂದು ಅವರು ತಿಳಿಸಿದರು.
ಭಾರತದಾದ್ಯಂತ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ ನಿರಂತರ ಬಳಕೆ ಆತಂಕವನ್ನು ಉಂಟು ಮಾಡಿದೆ ಎಂದಿರುವ ಅವರು, ಜಮ್ಮು ಮತ್ತು ಕಾಶ್ಮೀರವು ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದರು.
ಬಶ್ಲೆಟ್ ಅವರ ಟೀಕೆಗಳಿಗೆ ಭಾರತ ಸರ್ಕಾರ ಯಾವುದೇ ಅಧಿಕೃತ ಪ್ರತಿಕ್ರಿಯೆಯನ್ನು ಇಲ್ಲಿಯವರೆಗೆ ನೀಡಿಲ್ಲ. ಆದರೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ ಟೀಕೆಗಳನ್ನು ಭಾರತವು ಅನೇಕ ಸಂದರ್ಭಗಳಲ್ಲಿ ಬಲವಾಗಿ ತಿರಸ್ಕರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.