ಬೆಂಗಳೂರು: ‘ದೇಶದ ಆರ್ಥಿಕ ಕ್ಷೇತ್ರಕ್ಕೆ ಆರ್ಯವೈಶ್ಯ ಸಮಾಜದ ಕೊಡುಗೆ ಅಪಾರವಾದುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ವಿವಿಧತೆಯಲ್ಲಿ ಏಕತೆ ಸಾರಿದ ಆರ್ಯವೈಶ್ಯ ಸಮುದಾಯ ಚಂದ್ರಗುಪ್ತ ಮೌರ್ಯ, ದಾಸ ಶ್ರೇಷ್ಠರು ಮುಂತಾದವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ.ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಕೊಂಡಿದ್ದಾರೆ’ ಎಂದರು.
ಸಂಸದ ಅನಂತಕುಮಾರ್ ಮಾತನಾಡಿ ‘ವಾಣಿಜ್ಯ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಆರ್ಯವೈಶ್ಯ ಸಮಾಜ ರಾಜಕೀಯವಾಗಿ ಮುಂದೆ ಬರಬೇಕಿದೆ. ಸಮುದಾಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜಕೀಯ ಪ್ರಾತಿನಿಧ್ಯ ಅಗತ್ಯವಿದೆ’ ಎಂದು ಕರೆ ನೀಡಿದರು.
ಆಂಧ್ರಪ್ರದೇಶ ಸಣ್ಣ ನೀರಾವರಿ ಸಚಿವ ಟಿ.ಜಿ. ವೆಂಕಟೇಶ್ ಮಾತನಾಡಿ ‘ಹಿಂದುಳಿದ ವರ್ಗಗಳೊಂದಿಗೆ ಗುರುತಿಸಿಕೊಂಡಿರುವ ಆರ್ಯವೈಶ್ಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಅಗತ್ಯವಿದೆ. ಇದರಿಂದಾಗಿ ಸಮುದಾಯದ ಬಡಜನರಿಗೆ ಸಾಕಷ್ಟು ಅನುಕೂಲವಾಗಲಿದೆ’ ಎಂದರು.
ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಾಸಕ ಶಿವಣ್ಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಜಿ.ನಂದಕುಮಾರ್, ಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದೇವೇಗೌಡರ ಪ್ರಶಂಸೆ:‘ಧಾರ್ಮಿಕ ನೆಲೆಗಟ್ಟಿನ ಮೇಲೆ ನಿಂತಿರುವ ಭಾರತವನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಜನಿಸಿದ ಧಾರ್ಮಿಕ ನಾಯಕರು ತಮ್ಮದೇ ಆದ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಶತಮಾನೋತ್ಸವ ಸಮಾರಂಭದಲ್ಲಿ ಭಾನುವಾರ ನಡೆದ ರಾಜಕೀಯ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜಕ್ಕೆ ಆರ್ಯವೈಶ್ಯ ಜನಾಂಗ ನೀಡಿರುವ ಕೊಡುಗೆ ಕೂಡ ಗಮನಾರ್ಹವಾದುದು. ರಾಜಕೀಯ ಕ್ಷೇತ್ರದಲ್ಲಿ ಆರ್ಯವೈಶ್ಯ ಜನಾಂಗದವರು ತುಂಬಾ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಕೆಲವೇ ಸಂಖ್ಯೆಯಲ್ಲಿದ್ದರೂ ಈ ನಾಯಕರು ಪ್ರಾಮಾಣಿಕರಾಗಿದ್ದಾರೆ. ಡಿ.ಎಚ್. ಶಂಕರಮೂರ್ತಿ ಇಂತಹವರಲ್ಲಿ ಒಬ್ಬರು. ಇಂತಹ ಸಜ್ಜನಿಕೆ ನಾಯಕರನ್ನು ಗುರುತಿಸುವಂತಾಗಲಿ’ ಎಂದು ಅವರು ಹೇಳಿದರು.ಪಿ.ಜಿ.ಆರ್ ಸಿಂಧ್ಯ ಅವರು ಮುಖ್ಯ ಅತಿಥಿಯಾಗಿದ್ದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರ ಸ್ವತಿ, ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.