ಚೆನ್ನೈ (ಐಎಎನ್ಎಸ್): ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ (ಕೆಆರ್ಎಸ್) ಸೆ.29 ರಿಂದ ಹರಿಸುತ್ತಿದ್ದ ಕಾವೇರಿ ನೀರನ್ನು ಕರ್ನಾಟಕ ಸೋಮವಾರ ಸಂಜೆಯಿಂದ ಸ್ಥಗಿತಗೊಳಿಸಿದ ಬೆನ್ನಲ್ಲೇ ತಮಿಳುನಾಡು ಈ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸುವುದಾಗಿ ಮಂಗಳವಾರ ಹೇಳಿದೆ.
ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಪರಿಸ್ಥಿತಿ ಅವಲೋಕನಾ ಸಭೆಯಲ್ಲಿ ಈ ಕರ್ನಾಟಕದ ಕ್ರಮದ ವಿರುದ್ಧ `ಸುಪ್ರೀಂ~ ಮೊರೆ ಹೋಗುವ ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಲೋಕೊಪಯೋಗಿ ಇಲಾಖೆ ಸಚಿವ ಕೆ.ವಿ.ರಾಮಲಿಂಗಂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಸರ್ಕಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
`ಕಾವೇರಿ ನದಿಯಿಂದ ತಮಿಳುನಾಡಿಗೆ ಇನ್ನು ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ~ ಎಂದು ಕರ್ನಾಟಕ ಸೋಮವಾರ ಸುಪ್ರೀಂಕೋರ್ಟ್ಗೆ ಖಡಾಖಂಡಿತವಾಗಿ ತಿಳಿಸಿತು.
ನ್ಯಾ.ಡಿ.ಕೆ.ಜೈನ್ ಮತ್ತು ನ್ಯಾ. ಮದನ್ ಬಿ.ಲೋಕೂರ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಹಿರಿಯ ವಕೀಲ ಎಫ್.ಎಸ್. ನಾರಿಮನ್, `ತಮಿಳುನಾಡಿಗೆ ಇನ್ನು ನೀರು ಹರಿಸಲು ಸಾಧ್ಯವೇ ಇಲ್ಲ~ ಎಂದು ಕೈಚೆಲ್ಲಿದರು.
ಈಗಾಗಲೇ 13 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರು ಹರಿದು ಹೋಗಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಂಗ್ರಹ ಕಡಿಮೆ ಆಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಅವರ ಈ ವಾದಕ್ಕೆ ತಮಿಳುನಾಡಾಗಲೀ ಅಥವಾ ಕೇಂದ್ರವಾಗಲೀ ಯಾವುದೇ ತಕರಾರು ಎತ್ತಲಿಲ್ಲ. ಈ ಹಿನ್ನೆಲೆಯಲ್ಲಿ ರಾತ್ರಿ ಕಾವೇರಿ ಕೊಳ್ಳದ ಜಲಾಶಯಗಳ ಗೇಟುಗಳನ್ನು ಬಂದ್ ಮಾಡಲಾಗಿದೆ.