ಖಾತ್ರಿ: ರೂ.7.38 ಕೋಟಿ ಬಿಡುಗಡೆ
ಹಿರಿಯೂರು: ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ್ಙ 7.38 ಕೋಟಿ ಬಿಡುಗಡೆ ಮಾಡಿದ್ದು, ಪಂಚಾಯ್ತಿವಾರು ಹಣ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಜಯರಾಂ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಹಣ ಹಂಚಿಕೆ, ಕುಡಿಯುವ ನೀರಿನ ಸಮಸ್ಯೆ, ಆರೋಗ್ಯ ಸಮಸ್ಯೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಅವರು ಮಾತನಾಡಿದರು.
ಪಂಚಾಯ್ತಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಲು ಬೇರೆ ತಾಲ್ಲೂಕುಗಳ 9 ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಬ್ಬೊಬ್ಬರು 3ರಿಂದ 4 ಪಂಚಾಯ್ತಿಗಳ ವರದಿ ತರಿಸಿಕೊಂಡು ಪರಿಶೀಲಿಸುತ್ತಾರೆ. ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಹಣ ಬಿಡುಗಡೆ ಮಾಡಲಾಗುವುದು. ಸಮಸ್ಯೆ ಇದ್ದ ಕಡೆ ಕೂಲಿ ಹಣ ಮಾತ್ರ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ತಾಲ್ಲೂಕು ಪಂಚಾಯ್ತಿ ಇಒ ರಮೇಶ್ ಅವರು ವಸತಿ ಯೋಜನೆ ಪ್ರಗತಿಯಲ್ಲಿ ಹಿರಿಯೂರು ತಾಲ್ಲೂಕು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲು ಸೂಚನೆ: ತಾಲ್ಲೂಕಿನ ಐಮಂಗಲ ಹೋಬಳಿಯ ಐಮಂಗಲ, ಮರಡಿದೇವಿಗೆರೆ, ಕಲ್ಲಹಟ್ಟಿ, ಭರಂಪುರ, ದಾಸಣ್ಣನಮಾಳಿಗೆ ಮೊದಲಾದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಿದೆ. ಬರ ಪರಿಹಾರ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳನ್ನು ಸೇರಿಸಿ ತಕ್ಷಣ ಪರಿಹಾರ ನೀಡಬೇಕು ಎಂದು ಅವರು ಸಲಹೆ ಮಾಡಿದರು.
ಕ್ರಮಕ್ಕೆ ಸೂಚನೆ: ತಾಲ್ಲೂಕಿನ ಬಗ್ಗನಡು ಗ್ರಾಮದಲ್ಲಿ ಡೆಂಗೆಜ್ವರ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ಮೃತಪಟ್ಟಿರುವ ನಾಲ್ವರಲ್ಲಿ ಒಬ್ಬರು ಡೆಂಗೆಯಿಂದ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ತಾಲ್ಲೂಕುಮಟ್ಟದ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ತೆರಳಿ ಇಡೀ ಹಳ್ಳಿಗೆ ಡೆಂಗೆ ಜ್ವರ ಹರಡಲು ಕಾರಣವಾಗಿರುವ ಅಂಶಗಳನ್ನು ಪತ್ತೆ ಮಾಡಿ, ಪರಿಹಾರ ಕಂಡು ಹಿಡಿಯಬೇಕು ಎಂದು ಸೂಚಿಸಿದರು.
ಗ್ರಾಮದಲ್ಲಿ ಸೊಳ್ಳೆನಾಶಕ ಸಿಂಪರಣೆ ಮಾಡಬೇಕು. ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸಬೇಕು. ಜನರಿಗೆ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಜಯರಾಂ ಅಧಿಕಾರಿಗಳಿಗೆ ತಿಳಿಸಿದರು.
ಮುಖ್ಯ ಯೋಜನಾಧಿಕಾರಿ ಚಂದ್ರಪ್ಪ, ಯೋಜನಾ ನಿರ್ದೇಶಕ ಲಕ್ಷ್ಮೀನಾರಾಯಣ್ ಹಾಗೂ ನೋಡೆಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.