ಚುನಾವಣೆ ಸಿಬ್ಬಂದಿಗೆ ತರಬೇತಿ

ಶಿವಮೊಗ್ಗ: ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ನೇಮಕಗೊಂಡ ಸೊರಬ, ಹೊಸನಗರ ಮತ್ತು ಭದ್ರಾವತಿ ತಾಲ್ಲೂಕಿನ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಚುನಾವಣಾ ನಿರ್ವಹಣೆ ಕುರಿತು ಸೋಮವಾರ ತರಬೇತಿ ನೀಡಲಾಯಿತು.
ತರಬೇತಿಯಲ್ಲಿ, ಮತಗಟ್ಟೆಗಳಲ್ಲಿ ನಿರ್ವಹಿಸಬೇಕಾದ ನಿಯಮಗಳು, ಎಲೆಕ್ಟ್ರಾನಿಕ್ ಮತಯಂತ್ರದ ಕಾರ್ಯನಿರ್ವಹಣೆ, ಪೂರ್ವಸಿದ್ಧತೆ ಕ್ರಮಗಳ ಕುರಿತು ನಿಯೋಜನೆಗೊಂಡ 390 ಜನ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ತಾಲ್ಲೂಕಿನ ಚುನಾವಣಾಧಿಕಾರಿ ಎಚ್.ಎನ್. ಗೋಪಾಲಕೃಷ್ಣ, ಮತಗಟ್ಟೆಯಲ್ಲಿ ಶಿಸ್ತು, ಶಾಂತಿಯುತ ಮತ್ತು ನಿಷ್ಪಕ್ಷಪಾತವಾಗಿ ಮತದಾನ ನಡೆಯುವಂತೆ ಎಲ್ಲ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಪ್ರತಿ ಬೂತ್ನಲ್ಲಿ ಒಬ್ಬ ಪ್ರಿಸೈಡಿಂಗ್ ಅಧಿಕಾರಿ, ಒಬ್ಬ ಸಹಾಯಕ ಮತಗಟ್ಟೆ ಅಧಿಕಾರಿ, ಮೂವರು ಪೋಲಿಂಗ್ ಅಧಿಕಾರಿಗಳು ಇರುತ್ತಾರೆ. ಎರಡು ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ಎರಡು ಬ್ಯಾಲಟ್ ಯೂನಿಟ್ಗಳಿರುತ್ತವೆ. ಮತದಾರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿಗೆ ಪ್ರತ್ಯೇಕವಾಗಿ ಮತದಾನ ಮಾಡುತ್ತಾನೆ ಎಂದು ವಿವರಿಸಿದರು. ಪ್ರತಿಯೊಬ್ಬರೂ ತರಬೇತಿ ಮತ್ತು ಚುನಾವಣೆ ನಿರ್ವಹಣೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಗೋಪಾಲಕೃಷ್ಣ ತಿಳಿಸಿದರು.
ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಸಿದ್ದಪ್ಪ, ಚುನಾವಣೆ ನಿರ್ವಹಣೆಗೆ ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು. ಶಿವಮೊಗ್ಗ ವಿಭಾಗದ ವೀಕ್ಷಕ ಮೀರ್ ಅನೀಸ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.