ನವದೆಹಲಿ (ಪಿಟಿಐ): ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ 2008ರ ಮಾಲೇಗಾಂವ್ ಸ್ಪೋಟ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಗಳನ್ನು ಇನ್ನೊಂದು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ವಿಚಾರಣಾಧೀನ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
ಅಲ್ಲದೇ, ರಾಕೇಶ್ ಡಿ. ಧವ್ಡೆ ಅವರನ್ನು ಹೊರತು ಪಡಿಸಿ ಇತರ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವಾಗ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ತಡೆ ಕಾಯ್ದೆಯನ್ನು (ಎಂಸಿಒಸಿಎ) ಪರಿಗಣಿಸದಂತೆಯೂ ನ್ಯಾಯಮೂರ್ತಿ ಎಫ್.ಎಂ.ಐ. ಕಲಿಫುಲ್ಲಾ ಅವರಿದ್ದ ಪೀಠ ನಿರ್ದೇಶಿಸಿದೆ.
ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದಲ್ಲಿ ಜಾಮೀನು ನೀಡುವಾಗ ಕಠಿಣ ಎಂಸಿಒಸಿಎ ಕಾಯ್ದೆಯನ್ನು ಪರಿಗಣಿಸದಿರುವಂತೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಿದ್ದರು.
2008ರ ಸೆಪ್ಟಂಬರ್ 29ರಂದು ಮಾಲೇಗಾಂವ್ದಲ್ಲಿ ನಡೆದ ಸ್ಫೋಟ ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದರು.