ತಾಲ್ಲೂಕು ಕಚೇರಿ ಕಾರ್ಯವೈಖರಿ ವಿರುದ್ಧ ಪ್ರತಿಭಟನೆ
ಕುಣಿಗಲ್: ತಾಲ್ಲೂಕು ಕಚೇರಿಯ ಅಸಮರ್ಪಕ ಕಾರ್ಯವೈಖರಿ ಖಂಡಿಸಿ ಜೆಡಿಎಸ್ ಮುಖಂಡರು ಹಾಗೂ ಮಹಿಳೆಯರು ಗುರುವಾರ ಪ್ರತಿಭಟಿಸಿದರು.ಪಟ್ಟಣದ ಬಸ್ ನಿಲ್ದಾಣದ ಬಳಿ ಸೇರಿದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ, ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಎನ್.ಜಗದೀಶ್, ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರ್ಕಾರ ಜಾತಿ-ಆದಾಯ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. ಪ್ರಮಾಣ ಪತ್ರಕ್ಕಾಗಿ ಫಲಾನುಭವಿಗಳು ರೂ. 500ರಿಂದ ರೂ 1000 ವರೆಗೆ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅರ್ಜಿದಾರರ ವಾಸಸ್ಥಳವನ್ನೇ ಪರಿಶೀಲಿಸದ ರಾಜಸ್ವ ನಿರೀಕ್ಷಕರು ಮಧ್ಯವರ್ತಿಗಳ ಮಾತಿನಂತೆ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ ಎಂದು ದೂರಿದರು.
ನೆಮ್ಮದಿ ಕೇಂದ್ರವು ತಾಲ್ಲೂಕು ಕಚೇರಿಯಿಂದ 2 ಕಿ.ಮೀ ದೂರದಲ್ಲಿದೆ. ಮಹಡಿಯ ಮೇಲೆ ಕಾರ್ಯ ನಿರ್ವಹಿಸುತ್ತಿರುವುದರಿಂದ ವೃದ್ಧರು, ಅಂಗವಿಕಲರು ನೆಮ್ಮದಿ ಕೇಂದ್ರ ಸಂಪರ್ಕಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಹಶೀಲ್ದಾರ್ ಇತ್ತ ಗಮನ ಹರಿಸಬೇಕೆಂದು ಆಗ್ರಹಿಸಿದರು.
ತಹಶೀಲ್ದಾರ್ ಎನ್.ಸಿ.ಜಗದೀಶ್ ಮನವಿ ಸ್ವೀಕರಿಸಿದರು. ಆದಾಯ ಪ್ರಮಾಣ ಪತ್ರ ವಿತರಣೆಯಲ್ಲಿ ಉಂಟಾಗಿರುವ ಲೋಪದೋಷ ಸರಿಪಡಿಸಲು ಖುದ್ದು ಭೇಟಿ ನೀಡಿ ಕ್ರಮ ತೆಗೆದುಕೊಳ್ಳಲಾಗುವುದು. ಸೆಪ್ಟೆಂಬರ್ 1ರಿಂದ ತಾಲ್ಲೂಕು ಕಚೇರಿಯಲ್ಲೇ ನೆಮ್ಮದಿ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಲ್.ಹರೀಶ್, ಪುರಸಭೆ ಅಧ್ಯಕ್ಷೆ ನಳಿನಾ ಭೈರಪ್ಪ, ಮಾಜಿ ಅಧ್ಯಕ್ಷೆ ಆಯಿಷಾಬೀ, ಸದಸ್ಯರಾದ ಅಬ್ದುಲ್ ಹಮೀದ್, ಸಮೀವುಲ್ಲ, ಚಂದ್ರಶೇಖರ್, ಮಂಜು, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಆರ್.ಚಿಕ್ಕಣ್ಣ ಮತ್ತಿತರರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.