ತುಮಕೂರು ಬಳಿ ರಸ್ತೆ ಅಪಘಾತ: 15 ಸಾವು

ತುಮಕೂರು (ಐಎಎನ್ಎಸ್): ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಹೆಗ್ಗರೆ ಗ್ರಾಮದ ಸಮೀಪ ಟೆಂಪೊ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರು ಮೃತಪಟ್ಟಿದ್ದಾರೆ.
~ಸೋಮವಾರ ಮಧ್ಯಾಹ್ನ 1ಗಂಟೆ ವೇಳೆಗೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಟೆಂಪೊ, ವಾಹನ ಒಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿದ್ದಾಗ ಎದುರಿನಿಂದ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ~ ಎಂದು ತುಮಕೂರು ಜಿಲ್ಲಾಧಿಕಾರಿ ಸಿ.ಸೋಮಶೇಖರ್ ತಿಳಿಸಿದ್ದಾರೆ.
~ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನತದೃಷ್ಟ ಟೆಂಪೊ ಗುಬ್ಬಿ ಬಳಿಯ ಹಳ್ಳಿಯೊಂದಕ್ಕೆ ಸೇರಿದೆ. ಟೆಂಪೊದಲ್ಲಿದ್ದವರಲ್ಲಿ 15 ಮಂದಿ ಮೃತಪಟ್ಟಿದ್ದು, ಐವರಿಗೆ ತೀವ್ರ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ~ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಮೃತರ ಕುಟುಂಬದವರಿಗೆ ಸರ್ಕಾರ 50 ಸಾವಿರ ರೂಪಾಯಿ ಪರಿಹಾರ ಧನ ನೀಡಲಿದೆ. ಜತೆಗೆ ಗಾಯಗೊಂಡವರಿಗೆ ಚಿಕಿತ್ಸೆಗಾಗಿ 15 ಸಾವಿರ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.
ಚಾಲಕ ಸೇರಿದಂತೆ ಹದಿಮೂರು ಜನ ಪ್ರಯಾಣಿಕರಿಗೆ ಅವಕಾಶವಿದ್ದ ಈ ನತದೃಷ್ಟ ಟೆಂಪೊದಲ್ಲಿ ಒಟ್ಟು 20 ಮಂದಿ ಪ್ರಯಾಣಿಸುತ್ತಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.