ಪುಟ್ಟೇನಹಳ್ಳಿ ಜಂಕ್ಷನ್ ಅಂಡರ್ಪಾಸ್ ಪೂರ್ಣ: 25ರಿಂದ ಪ್ರಾಯೋಗಿಕ ಸಂಚಾರ
ಬೆಂಗಳೂರು: ‘ಜೆ.ಪಿ.ನಗರದ ಪುಟ್ಟೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೇ 25ರಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು’ ಎಂದು ಬಿಬಿಎಂಪಿ ಆಯುಕ್ತ ಸಿದ್ದಯ್ಯ ಹೇಳಿದರು.
ಪುಟ್ಟೇನಹಳ್ಳಿ ಜಂಕ್ಷನ್ ಸೇರಿದಂತೆ ಹಲವೆಡೆ ಶುಕ್ರವಾರ ಭೇಟಿ ನೀಡಿದ ಆಯುಕ್ತರು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
‘ಅಂಡರ್ಪಾಸ್ ನಿರ್ಮಾಣ ಕೆಲಸ ಅಂತಿಮ ಹಂತದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕೃತವಾಗಿ ಉದ್ಘಾಟಿಸುವುದಿಲ್ಲ. ಆದರೆ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.
‘ಕದಿರೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಅಗತ್ಯವಾದ 44 ಖಾಸಗಿ ಆಸ್ತಿಯನ್ನು ವಾರದೊಳಗೆ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಆಸ್ತಿದಾರರಿಗೆ ಪ್ರತಿ ಚದರ ಅಡಿಗೆ 3000 ರೂಪಾಯಿ ಪರಿಹಾರ ನೀಡಲಾಗುವುದು’ ಎಂದರು.
‘ಇಲ್ಲಿನ ಆಸ್ತಿದಾರರಿಗೆ 3000 ರೂಪಾಯಿ ಪರಿಹಾರ ವಿತರಿಸುವ ಕುರಿತು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಸೋಮವಾರದಿಂದ ಪರಿಹಾರ ವಿತರಿಸುವ ಕಾರ್ಯ ಆರಂಭಿಸಿ ಭೂಮಿಯನ್ನು ವಶಪಡಿಸಿಕೊಳ್ಳಲಾಗುವುದು. ಮಾರ್ಚಿ 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು.
‘ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಅಗತ್ಯವೆನಿಸಿದ ಸ್ಥಳಗಳಲ್ಲಿ ಸ್ವಯಂಚಾಲಿತ ಪಾದಚಾರಿ ಮೇಲುಸೇತುವೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪಾದಚಾರಿ ಸುರಂಗ ಮಾರ್ಗಗಳನ್ನು ಬಳಸಲು ಜನರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಸ್ವಯಂಚಾಲಿತ ಮೇಲು ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದ ಪಾದಚಾರಿಗಳಿಗೂ ಅನುಕೂಲವಾಗಲಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.