ಮತದಾನ ಹೆಚ್ಚಳ: ಜಾಗೃತಿಗೆ ಸೂಚನೆ

ಲಿಂಗಸುಗೂರು: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆ ಅಗತ್ಯವಿದೆ. ಪ್ರಜಾಪ್ರಭುತ್ವ ಬಲಗೊಳಿಸಲು ನೀವುಗಳೆಲ್ಲ ಪ್ರತಿಯೊಬ್ಬರು ಮತದಾರರ ಮನೆ ಬಾಗಿಲಿಗೆ ತೆರಳಿ ಮತಗಟ್ಟೆಗೆ ಬಂದು ಮತ ಚಲಾಯಿಸುವ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಿ ಮತದಾನ ಹೆಚ್ಚಳಕ್ಕೆ ಸಹಕಾರ ನೀಡುವಂತೆ ಉಪ ವಿಭಾಗಾಧಿಕಾರಿ ಟಿ. ಯೋಗೇಶ ಸೂಚಿಸಿದರು.
ಗುರುವಾರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಶಾಲಾ ಕಾಲೇಜುಗಳ ಮುಖ್ಯಸ್ಥರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿ, ಆಯಾ ಪಂಚಾಯಿತಿ ವ್ಯಾಪ್ತಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಭಿತ್ತಿಪತ್ರ, ಬ್ಯಾನರ್, ಧ್ವನಿವರ್ಧಕಗಳ ಮೂಲಕ ಶೇಕಡ ನೂರರಷ್ಟು ಮತದಾನಕ್ಕಾಗಿ ಜಾಗೃತಿ ಮೂಡಿಸಲು ಮನವಿ ಮಾಡಿದರು.
ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ಜಮೀನುಗಳಲ್ಲಿಯೇ ಮನೆ ಮಾಡಿಕೊಂಡಿರುವ ತಾಂಡಾ, ದೊಡ್ಡಿ ಪ್ರದೇಶದ ಜನತೆಗೂ ಕೂಡ ಮಾಹಿತಿ ತಲುಪಿಸಿ ಏಪ್ರಿಲ್ 17ರಂದು ಬೆಳಿಗ್ಗೆ 7 ರಿಂದ ಸಂಜೆ 6ರ ವರೆಗೆ ನಡೆಯುವ ಮತದಾನಕ್ಕೆ ಮತಗಟ್ಟೆಗೆ ಜನತೆ ಬರುವಂತೆ ತಿಳಿಹೇಳಬೇಕು. ಶಾಲಾ ಕಾಲೇಜುಗಳಲ್ಲಿ ಯುವಕರಿಗೆ ಪ್ರತಿಜ್ಞಾ ವಿಧಿ ಬೋಧಿಸುವುದು ಸೇರಿದಂತೆ ಜಾಗೃತಿ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಇಂದಿನಿಂದ ಮತದಾನ ಜಾಗೃತಿ ಜ್ಯೋತಿ ಯಾತ್ರೆ ಆರಂಭಿಸಲಾಗುವುದು. ಆಯಾ ಪಂಚಾಯಿತಿ ವ್ಯಾಪ್ತಿಗೆ ಬಂದಾಗ ಪ್ರತಿಯೊಂದು ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ವಾಗತಿಸಿಕೊಂಡು ಮತಗಟ್ಟೆ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಬೀಳ್ಕೊಡಬೇಕು. ಹಂತ ಹಂತವಾಗಿ ವಿಶೇಷ ಕಾರ್ಯಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ತಹಶೀಲ್ದಾರ ಜಿ.ಎಸ್. ಮಹಾಜನ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸಪ್ಪ. ಭೂ ದಾಖಲೆಗಳ ಸಹಾಯಕ ನಿರ್ದೇಶಕ ಸುಜೇಂದ್ರ. ಮುಖ್ಯಾಧಿಕಾರಿ ಈರಣ್ಣ ಬಿರಾದರ ಸೇರಿದಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.