ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಗೌರಿಬಿದನೂರು: ತಾಲ್ಲೂಕಿನ ಅಲಿಪುರ ಗ್ರಾಮದ ದಲಿತರ ಕಾಲೊನಿಗೆ ಕುಡಿಯುವ ನೀರು ಮತ್ತು ಮೂಲಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಕಾರ್ಯಕರ್ತರು ಸೋಮವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಮಾದಿಗ ದಂಡೋರ ಸಂಘಟನೆ ತಾಲ್ಲೂಕು ಅಧ್ಯಕ್ಷ ಎ.ಗಂಗಾಧರಪ್ಪ ಮಾತನಾಡಿ ಗ್ರಾಮದಲ್ಲಿ ನೂತನವಾಗಿ ದಲಿತರಿಗಾಗಿ ನಿರ್ಮಾಣವಾಗಿರುವ ಬಡಾವಣೆಗೆ ಇದುವರೆಗೂ ವಿದ್ಯುತ್ ಸಂಪರ್ಕವಿಲ್ಲ. ಚರಂಡಿ ವ್ಯವಸ್ಥೆಯಿಲ್ಲ. ರಾತ್ರಿ ವೇಳೆಯಂತೂ ಬಡಾವಣೆ ಓಡಾಡಲು ಭಯಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಳವೆ ಬಾವಿ ಕೊರೆಸಿದರೂ ಶುದ್ಧ ನೀರು ಘಟಕಕ್ಕೆ ಪಡೆಯಲಾಗಿದೆ. ಇದರಿಂದ ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರು ಇಲ್ಲದಂತಾಗಿದೆ ಎಂದು ಹೇಳಿದರು.ಆಧುನಿಕ ಕಾಲದಲ್ಲಿಯೂ ಸಹ ಇಲ್ಲಿನ ನಿವಾಸಿಗಳು ಅನಾಗರಿಕರಾಗಿ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಒದಗಿಸುವಂತೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದರು.
ದಲಿತ ಯುವ ಸೇನೆ ಅಧ್ಯಕ್ಷ ಬಾಬು,ಉಪಾಧ್ಯಕ್ಷ ಲಕ್ಕಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದಪ್ಪ, ಹನುಮಂತಪ್ಪ, ಲಕ್ಷ್ಮಮ್ಮ, ನಾಗಮ್ಮ, ಪ್ರಮೀಳಾ ಮತ್ತಿತರರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.